ಬೆಂಗಳೂರು: ಈ ಸರ್ಕಾರದ ಅವಧಿ ಇನ್ನು ಒಂದು ತಿಂಗಳು ಮಾತ್ರ. ಬಜೆಟ್ ಅಧಿವೇಶನದ ನಂತರ ಮುಂದಿನ ತಿಂಗಳು 7-10 ರ ಒಳಗೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಬಿಜೆಪಿ ಸರ್ಕಾರ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಇಂಧನ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಟೆಂಡರ್ ಗಳನ್ನು ತರಾತುರಿಯಲ್ಲಿ ಸಿದ್ಧಪಡಿಸುತ್ತಿದೆ.
500 ಕೋಟಿ ರೂ ಮೌಲ್ಯದ ಟೆಂಡರ್ ಇದ್ದರೆ ಅದರ ಅಂದಾಜು ಮೊತ್ತವನ್ನು 1000 ಕೋಟಿಯಷ್ಟು ಮಾಡಿಸಿದ್ದಾರೆ. ಈ ಬಗ್ಗೆ ನಾವು ಎಲ್ಲ ರೀತಿಯ ದಾಖಲೆ ನೀಡಲು ಸಿದ್ಧವಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಪ್ರಮುಖ ಇಲಾಖೆಗಳಲ್ಲಿ ಪ್ರತಿ ಟೆಂಡರ್ ಮೊತ್ತವನ್ನು ದುಪ್ಪಟ್ಟು ಮಾಡಿ ಕೆಲವನ್ನು ಸಂಪುಟದಲ್ಲಿ ತೀರ್ಮಾನಿಸಿ ನೀಡಿದರೆ, ಮತ್ತೆ ಕೆಲವನ್ನು ಸಂಪುಟದ ತೀರ್ಮಾನವಿಲ್ಲದೇ ಕೇವಲ 7 ದಿನಗಳ ಅಲ್ಪಾವಧಿಯಲ್ಲೇ ನೀಡುತ್ತಿದ್ದಾರೆ. ಶಾಸಕರುಗಳಿಗೆ ಇದರ ಉಸ್ತುವಾರಿ ವಹಿಸಿ, ಅವರೇ ಗುತ್ತಿಗೆದಾರರನ್ನು ಗುರುತಿಸಿ ಟೆಂಡರ್ ನೀಡುವ ಜವಾಬ್ದಾರಿ ನೀಡಲಾಗಿದೆ. ಈ ಶಾಸಕರು ಬೀದಿ, ಬೀದಿಯಲ್ಲಿ ಗುತ್ತಿಗೆದಾರರಿಗೆ ಆಹ್ವಾನ ನೀಡಿ ಈ ಟೆಂಡರ್ ಪಡೆಯಲು ಚುನಾವಣೆಗೂ ಮುನ್ನ ಇಂತಿಷ್ಟು ಹಣ ನೀಡಬೇಕು ಎಂದು ಹೇಳುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕೂಡ ದೂರು ನೀಡಿದ್ದಾರೆ ಎಂದರು.
ಬಿಜೆಪಿ ಶಾಸಕರು, ಮಂತ್ರಿಗಿರಿ ಸಿಗದವರಿಗೆ ಈ ರೀತಿ ಟೆಂಡರ್ ಹಂಚುತ್ತಿದ್ದಾರೆ. ಈ ವಿಚಾರವಾಗಿ ಶಾಸಕರು, ಗುತ್ತಿಗೆದಾರರು ನಮಗೆ ಮಾಹಿತಿ ನೀಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಹಳೆ ಕಾಮಗಾರಿಯ ಸಾವಿರಾರು ಕೋಟಿ ಹಣ ಬಾಕಿ ಉಳಿಸಿಕೊಂಡಿದ್ದು, ಯಾರು ಮಂತ್ರಿಗಳು ಹಾಗೂ ಸರ್ಕಾರಕ್ಕೆ ಕಮಿಷನ್ ನೀಡುತ್ತಾರೋ ಅವರ ಬಿಲ್ ಮಾತ್ರ ಪಾಸ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.