ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ಜಿಲ್ಲೆಯ ಜನತೆಗೆ ನಿರಾಸೆ ಮೂಡಿಸಿದೆ. ತವರು ಜಿಲ್ಲೆ ಹಾವೇರಿಗೆ ಭರಪೂರ ಯೋಜನೆಗಳನ್ನು ಪ್ರಕಟಿಸಿರುವ ಅವರು ಪಕ್ಕದ ಗದಗ ಜಿಲ್ಲೆಯ ಬಗ್ಗೆ ಮಲತಾಯಿ ಧೋರಣೆ ತೋರಿದ್ದಾರೆ.
ಕೈಗಾರಿಕೆ, ಕೃಷಿ, ನೀರಾವರಿ, ಪ್ರವಾಸೋದ್ಯಮ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಸಾಕಷ್ಟು ಅನುದಾನ ಮತ್ತು ಹೊಸ ಯೋಜನೆಗಳು ಘೋಷಣೆ ಆಗಬಹುದು ಎಂಬ ಜಿಲ್ಲೆಯ ಜನರ ನಿರೀಕ್ಷೆಗಳು ಹುಸಿಯಾಗಿವೆ.
ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗಳಿಗೆ ಮಹದಾಯಿ ನ್ಯಾಯಾಧೀಕರಣದಿಂದ ಹಂಚಿಕೆಯಾದ 3.90 ಟಿಎಂಸಿ ಅಡಿ ನೀರಿನ ಬಳಕೆಗಾಗಿ ಡಿಪಿಆರ್ಗೆ ಕೇಂದ್ರ ಜಲ ಆಯೋಗದಿಂದ ಕೆಲವು ತಿಂಗಳ ಹಿಂದೆ ಅನುಮೋದನೆ ಸಿಕ್ಕಿತ್ತು. ಈ ಬಾರಿಯ ಬಜೆಟ್ನಲ್ಲಿ ಯೋಜನೆಯ ಅನುಷ್ಠಾನಕ್ಕೆ ಹೆಚ್ಚಿನ ಅನುದಾನ ಘೋಷಣೆ ಆಗುತ್ತದೆ ಎಂಬ ನಿರೀಕ್ಷೆ ಅಧಿಕವಾಗಿತ್ತು.
ಆದರೆ, ಡಿಪಿಆರ್ಗೆ ಅನುಮೋದನೆ ಒದಗಿಸಿದ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಗೆ ಧನ್ಯವಾದ ಸಲ್ಲಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಈ ಯೋಜನೆಯ ಕಾಮಗಾರಿ ಪ್ರಾರಂಭಿಸಲು ₹1000 ಕೋಟಿ ನೀಡಲು ಉದ್ದೇಶಿಸಲಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ ತ್ವರಿತ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದಷ್ಟೇ ಹೇಳಿದ್ದಾರೆ.
ತಾಲ್ಲೂಕು ಆಸ್ಪತ್ರೆ ಇಲ್ಲದ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನಾಗಿ ಹಂತ ಹಂತವಾಗಿ ಮೇಲ್ದರ್ಜೆಗೇರಿಸುವ ಯೋಜನೆ ಪ್ರಕಟಿಸಿದ್ದು, ಅದರಲ್ಲಿ ಶಿರಹಟ್ಟಿ ಕೂಡ ಸೇರಿದೆ.
‘ಶಿರಹಟ್ಟಿಯಲ್ಲಿ ಈಗಾಗಲೇ ತಾಲ್ಲೂಕು ಆಸ್ಪತ್ರೆ ಇದೆ. ಶಿರಹಟ್ಟಿಯಿಂದ ಬೇರ್ಪಟ್ಟು ಹೊಸ ತಾಲ್ಲೂಕು ಆಗಿರುವ ಲಕ್ಷ್ಮೇಶ್ವರ ಹಾಗೂ ರೋಣದಿಂದ ಬೇರ್ಪಟ್ಟು ಹೊಸ ತಾಲ್ಲೂಕು ಕೇಂದ್ರ ಆಗಿರುವ ಗಜೇಂದ್ರಗಡದಲ್ಲಿ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರಗಳೇ ಕಾರ್ಯನಿರ್ವಹಿಸುತ್ತಿವೆ. ಹೊಸದಾಗಿ ಉದಯಿಸಿದ ತಾಲ್ಲೂಕು ಕೇಂದ್ರಗಳ ಅಭಿವೃದ್ಧಿಗೆ ಈವರೆಗೂ ಅನುದಾನ ಸಿಕ್ಕಿಲ್ಲ. ತಾಲ್ಲೂಕು ಕೇಂದ್ರಗಳಲ್ಲಿ ಇರಬೇಕಾದ ಪೂರ್ಣ ಪ್ರಮಾಣದ ಕಚೇರಿಗಳು ಇನ್ನೂ ಆರಂಭಗೊಂಡಿಲ್ಲ. ಈ ಬಾರಿಯ ಬಜೆಟ್ನಲ್ಲಾದರೂ ಹೊಸ ತಾಲ್ಲೂಕುಗಳ ಅಭಿವೃದ್ಧಿ ಅನುದಾನ ಬಿಡುಗಡೆ ಆಗಬಹುದು ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ’ ಎಂದು ಲಕ್ಷ್ಮೇಶ್ವರ ಹಾಗೂ ಗಜೇಂದ್ರಗಡದ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.