ಬೆಳಗಾವಿ : ಕೊರೊನಾ ಸೋಂಕಿನಿಂದ ಮೃತಪಟ್ಟ ಸಾರಿಗೆ ಇಲಾಖೆ ಸಿಬ್ಬಂದಿ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಕೊರೊನಾದಿಂದ ಸಾರಿಗೆ ಇಲಾಖೆ ಮೂರು ಸಾವಿರ ಕೋಟಿಗೂ ಅಧಿಕ ನಷ್ಟ ಅನುಭವಿಸುತ್ತಿದೆ. ಇದರಿಂದ ಸಾರಿಗೆ ಇಲಾಖೆಯ ಸಿಬ್ಬಂದಿಯ ವೇತನ ವಿಳಂಬವಾಗುತ್ತಿದೆ.
ಸದ್ಯ ಸಾರಿಗೆ ಇಲಾಖೆಯಲ್ಲಿ 1 ಲಕ್ಷ 30 ಸಾವಿರ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಸೋಂಕಿಗೆ 50 ಜನ ಸಿಬ್ಬಂದಿ ಮೃತಪಟ್ಟಿದ್ದಾರೆ. ಮೃತರ ಪ್ರತಿ ಕುಟುಂಬಕ್ಕೆ ತಲಾ 50 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗುವುದು ಎಂದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ 33 ಸಾವಿರ ಕೋಟಿ ರೂ. ಸಾಲ ಕೊಡಲು ಮುಂದಾಗಿದೆ. ಹಣ ಬಂದ ಕೂಡಲೇ ಎಲ್ಲಾ ವ್ಯವಸ್ಥೆಗಳು ಸುಗಮವಾಗಲಿವೆ ಎಂದು ಹೇಳಿದರು.