Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿಗರ ಪ್ರೀತಿ ಬಡ್ಡಿ ಸಮೇತ ವಾಪಸ್‌ : ಪ್ರಧಾನಿ ನರೇಂದ್ರ ಮೋದಿ

ಬೆಳಗಾವಿಗರ ಪ್ರೀತಿ ಬಡ್ಡಿ ಸಮೇತ ವಾಪಸ್‌ : ಪ್ರಧಾನಿ ನರೇಂದ್ರ ಮೋದಿ

Spread the love

ಬೆಳಗಾವಿ: ‘ಬೆಳಗಾವಿ ಜನ ತೋರಿದ ಪ್ರೀತಿ, ಮಾಡಿದ ಆಶೀರ್ವಾದ ನನಗೆ ಸ್ಫೂರ್ತಿ ನೀಡಿದೆ. ಬೆಳಗಾವಿ ಕುಂದಾ, ಬೆಳಗಾವಿ ಮಂದಿ ಎರಡೂ ಬಹಳ ಸಿಹಿ. ನಿಮ್ಮ ಈ ಪ್ರೀತಿಯನ್ನು ಬಡ್ಡಿ ಸಮೇತ ವಾಪಸ್‌ ಕೊಡುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.

 

ನಗರದಲ್ಲಿ ಸೋಮವಾರ ₹2,240 ಕೋಟಿ ವೆಚ್ಚದ ರೈಲ್ವೆ ಕಾಮಗಾರಿ, ಜಲಜೀವನ್ ಮಿಷನ್ ಯೋಜನೆಗಳ ಉದ್ಘಾಟನೆ- ಶಂಕುಸ್ಥಾಪನೆ ನೆರವೇರಿಸಿ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ₹16 ಸಾವಿರ ಕೋಟಿಯನ್ನು ರೈತರ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಿ ಅವರು ಮಾತನಾಡಿದರು.

‘ನಿರೀಕ್ಷಿತ ಅಭಿವೃದ್ಧಿ ಮೂಲಕವೇ ನಿಮ್ಮ ಋಣ ತೀರಿಸುತ್ತೇನೆ. ಕೊಟ್ಟ ಮಾತಿಗೆ ಕಟಿಬದ್ಧನಾಗಿದ್ದೇನೆ. ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ, ಹಿರಿಯ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರ ಚಿಂತನೆಗಳು ರಾಜ್ಯವನ್ನು ಅಭಿವೃದ್ಧಿಯತ್ತ ಸಾಗಿಸಿವೆ’ ಎಂದರು.

ಕೃಷಿಗೆ ಆಧುನಿಕ ಸ್ಪರ್ಶ: ‘ಒಂದು ಬಟನ್‌ ಒತ್ತಿದರೆ ₹16 ಸಾವಿರ ಕೋಟಿ ರೈತರಿಗೆ ಹೋಗುತ್ತದೆ. ಇಷ್ಟೊಂದು ದೊಡ್ಡ ಮೊತ್ತ ಒಂದು ಕ್ಷಣದಲ್ಲಿ ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತಿರುವುದನ್ನು ಜಗತ್ತು ಸೋಜಿಗದಿಂದ ನೋಡುತ್ತಿದೆ. ಸೋರಿಕೆ ಇಲ್ಲದೇ ಇದು ಸಾಧ್ಯ ಎಂದು ತೋರಿಸಿದ್ದೇವೆ. ತಲಾ ಎರಡೂವರೆ ಲಕ್ಷ ರೂಪಾಯಿ ಈಗಾಗಲೇ ರೈತರ ಖಾತೆಗೆ ಜಮಾ ಆಗಿದೆ. ಕೃಷಿ ಅಗತ್ಯತೆಗಳಿಗಾಗಿ ಸಾಲಕ್ಕಾಗಿ ರೈತರು ಇತರರ ಬಳಿ ಕೈ ಒಡ್ಡದಂತೆ ಸ್ವಾವಲಂಬಿಯಾಗಿಸಿದೆ’ ಎಂದರು.

‘ದೇಶದಲ್ಲಿ ಶೇ 60ರಷ್ಟು ಸಣ್ಣ ರೈತರೇ ಇದ್ದಾರೆ. ಕಿಸಾನ್‌ ಸಮ್ಮಾನ್‌ ಅವರಿಗಾಗಿಯೇ ಮಾಡಿದ ಯೋಜನೆ. ಕೃಷಿಗೆ ಆಧುನಿಕ ಸ್ಪರ್ಶ ನೀಡುವ ಮೂಲಕ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡುವುದು ನಮ್ಮ ಉದ್ದೇಶವಾಗಿತ್ತು. ಅದರಲ್ಲಿ ಯಶಸ್ಸು ಕಂಡಿದ್ದೇವೆ. 2014 ರಲ್ಲಿ ಕೃಷಿಗೆ ಮೀಸಲಿಟ್ಟ ಬಜೆಟ್ ಕೇವಲ ₹25 ಸಾವಿರ ಕೋಟಿ ಇತ್ತು. ಈ ವರ್ಷ ನಮ್ಮ ಸರ್ಕಾರದ ಬಜೆಟ್‌ನಲ್ಲಿ ₹1.25 ಲಕ್ಷ ಕೋಟಿ ಮೀಸಲಿಡಲಾಗಿದೆ’ ಎಂದು ತಿಳಿಸಿದರು.

ಕೇಂದ್ರ ಕೃಷಿ ಹಾಗೂ ಕಿಸಾನ್ ಕಲ್ಯಾಣ ಮಂತ್ರಿ ನರೇಂದ್ರಸಿಂಗ್ ತೋಮರ್ ಮಾತನಾಡಿ, ‘ರೈತರ ಆದಾಯ ಹೆಚ್ಚಿಸಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಜಾರಿಯಾಗಿದೆ. ರೈತ ಸಮೃದ್ಧವಾಗಿ ಬೆಳೆದರೆ, ದೇಶ ಸಮೃದ್ಧವಾಗಿರಲು ಸಾಧ್ಯ ರೈತನ ಹಿತ ಕಾಪಾಡುವ ಕಾರ್ಯವನ್ನು ಸರ್ಕಾರ ನಿರ್ವಹಿಸುತ್ತಿದೆ. ಸಿರಿಧಾನ್ಯಗಳ ಉತ್ಪಾದನೆ ಮತ್ತು ಬಳಕೆಯ ಜಾಗೃತಿ ಮೂಡಿಸಲು ಮಾರ್ಚ್ 18 ರಂದು ಪ್ರಧಾನಿಯವರು ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ ಉದ್ದೇಶಿಸಿ ಮಾತನಾಡಲಿದ್ದಾರೆ’ ಎಂದರು.

ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ ಮಾತನಾಡಿದರು. ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಬಿ.ಸಿ.ಪಾಟೀಲ, ಶಶಿಕಲಾ ಜೊಲ್ಲೆ, ಸಂಸದರಾದ ಮಂಗಳಾ ಸುರೇಶ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಶಾಸಕರಾದ ಮಹೇಶ ಕುಮಠಳ್ಳಿ, ಪಿ.ರಾಜೀವ, ದುರ್ಯೋಧನ ಐಹೊಳೆ, ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ, ಅಭಯ ಪಾಟೀಲ, ಮಹದೇವಪ್ಪ ಯಾದವಾಡ, ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡರ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಹನುಮಂತ ನಿರಾಣಿ, ಡಾ.ಸಾಬಣ್ಣ ತಳವಾರ ವೇದಿಕೆ ಮೇಲಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ