70 ಕ್ಷೇತ್ರಗಳಲ್ಲಿ ವೀರಶೈವರಿಗೆ ಟಿಕೆಟ್‌: ಡಿಕೆಶಿಗೆ ಶಾಮನೂರು ಶಿವಶಂಕರಪ್ಪ ಮನವಿ

Spread the love

ಬೆಂಗಳೂರು: ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲೇಬೇಕೆಂದರೆ ವೀರಶೈವ ಲಿಂಗಾಯತ ಸಮುದಾಯದ ಬೆಂಬಲ ಅತ್ಯಗತ್ಯ. ಹೀಗಾಗಿ, ರಾಜ್ಯದ 224 ಕ್ಷೇತ್ರಗಳ ಪೈಕಿ 70ರಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮನವಿ ಸಲ್ಲಿಸಿದ್ದಾರೆ.

 

‘ಲಿಂಗಾಯತ-ವೀರಶೈವ ಸಮುದಾಯ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಪಕ್ಷ ಅಧಿಕಾರಕ್ಕೆ ಬರಲು ಈ ಸಮುದಾಯದ ಸಹಾಯ ಅವಶ್ಯಕ. ಲಿಂಗಾಯತರ ಬೆಂಬಲದಿಂದಲೇ ಬಿಜೆಪಿ ಅತಿ ಹೆಚ್ಚಿನ ಸ್ಥಾನ ಗೆಲ್ಲುತ್ತಿದೆ. ಬಿಜೆಪಿ ಮತ ಬ್ಯಾಂಕ್ ಕಬಳಿಸಬೇಕೆಂದರೆ ಕಾಂಗ್ರೆಸ್ ಪಕ್ಷದಲ್ಲಿನ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಹೆಚ್ಚಿನ ಟಿಕೆಟ್ ನೀಡಬೇಕು’ ಎಂದೂ ಪ್ರತಿಪಾದಿಸಿದ್ದಾರೆ.

‘ಕಳೆದ ಚುನಾವಣೆಯಲ್ಲಿ 40ಕ್ಕೂ ಹೆಚ್ಚು ಈ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. 16 ಜನ ಗೆದ್ದಿದ್ದಾರೆ. ಈ ಬಾರಿ 70 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಸೋಲಿಸಲು ಸಹಾಯಕವಾಗುತ್ತದೆ’ ಎಂದು ಹೇಳಿದ್ದಾರೆ.

ಪಕ್ಷದ ಹಾಲಿ ಶಾಸಕರ ಕ್ಷೇತ್ರಗಳನ್ನು ಹೊರತುಪಡಿಸಿ ವೀರಶೈವ ಮತ್ತು ಲಿಂಗಾಯತ ಸಮುದಾಯದ ಮತಗಳು ನಿರ್ಣಾಯಕವಾಗಿರುವ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಮುಖಂಡರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಕೋರಿದ್ದಾರೆ. ಟಿಕೆಟ್ ಬಯಸಿದ ಕ್ಷೇತ್ರಗಳ ಪಟ್ಟಿಯನ್ನೂ ಅವರು ಉಲ್ಲೇಖಿಸಿದ್ದಾರೆ.

ಯಾವ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ನೀಡಿದರೆ ಗೆಲ್ಲಲು ಸಾಧ್ಯ ಎಂದು ವರದಿ ನೀಡುವಂತೆ ಶಾಮನೂರು ಶಿವಶಂಕರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚಿಸಿದ್ದರು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಶಿವರಾತ್ರಿ ಹಬ್ಬದ ಬಳಿಕ ಬಜೆಟ್ ದಿನಾಂಕದ ಕುರಿತು ನಿರ್ಧಾರ: ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಬಳಿಕ ರಾಜ್ಯ ಬಜೆಟ್ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಬೆಳಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ