ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಪಕ್ಷಾಂತರ ಪರ್ವ ಜೋರಾಗಿ ಸದ್ದು ಮಾಡುತ್ತಿದೆ. ಆಡಳಿತಾರೂಢ ಬಿಜೆಪಿಗೆ ಈ ವಿಚಾರ ಈಗ ತೀವ್ರ ಪ್ರಮಾಣದಲ್ಲಿ ಒಳ ಏಟು ನೀಡಲಾರಂಭಿಸಿದ್ದು, ಪ್ರಬಲ “ವಿಕೆಟ್’ಗಳು ಉರುಳದಂತೆ ನೋಡಿಕೊಳ್ಳುವುದು ಕೇಸರಿ ಪಡೆಗೆ ಸವಾಲಾಗಿದೆ.
ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯುತ್ತಿರುವಾಗಲೇ ಬಿಜೆಪಿಯಿಂದ ವಲಸೆ ವಿಚಾರ ಸುದ್ದಿಯಾಗುತ್ತಿದೆ. ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವ ಸಚಿವ ನಾರಾಯಣ ಗೌಡ ಜತೆಗೆ ಇನ್ನೂ ಮೂವರು ಸಚಿವರು ಬಿಜೆಪಿ ತೊರೆಯಲಿದ್ದಾರೆ ಎಂಬ ಸುದ್ದಿ ಬಲವಾಗಿದೆ. ಇದೆಲ್ಲದರ ನಡುವೆ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರುವುದಕ್ಕೆ ವೇದಿಕೆ ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಭೇಟಿಗೆ ಮುಂಚಿತವಾಗಿ ಈ ಪ್ರಕ್ರಿಯೆ ಪೂರ್ಣಗೊಳಿಸುವುದಕ್ಕೆ ಸಿದ್ಧತೆ ನಡೆದಿದೆ.