ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಯೋಜನೆಯ ಸಂಪೂರ್ಣ ರೂವಾರಿ ಪ್ರಧಾನಿ ನರೇಂದ್ರ ಮೋದಿ. ಆದರೆ, ವಿರೋಧ ಪಕ್ಷಗಳು ಅನಗತ್ಯವಾಗಿ ಯೋಜನೆಯ ಹೆಸರಿನಲ್ಲಿ ಪ್ರಚಾರ ಪಡೆಯಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘2008ರಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮೂಲಕ ಈ ಮಾರ್ಗದಲ್ಲಿ ಹೆದ್ದಾರಿ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಯಾವ ಪ್ರಗತಿಯೂ ಆಗಿರಲಿಲ್ಲ. 2014ರಲ್ಲಿ ಕೇಂದ್ರ ಸರ್ಕಾರವು ಈ ಮಾರ್ಗವನ್ನು ರಾಷ್ಟ್ರೀಯ ಹೆದ್ದಾರಿ ಎಂಬುದಾಗಿ ಘೋಷಿಸಿತ್ತು’ ಎಂದರು.
2014ರಲ್ಲೇ ಹೆದ್ದಾರಿ ವಿಸ್ತರಣೆಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿತ್ತು. ಆದರೆ, ಕಾಮಗಾರಿ ಆರಂಭವಾಗಿರಲಿಲ್ಲ. 2015ರಲ್ಲಿ ಮಾರ್ಗ ನಕ್ಷೆಯನ್ನು ಅಂತಿಮಗೊಳಿಸಲಾಯಿತು. 2016ರಲ್ಲಿ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರ ಮಾಡಲಾಯಿತು. ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಅವಧಿಯಲ್ಲೇ ದಶಪಥ ಯೋಜನೆ ಆರಂಭವಾಗಿ, ಅವರ ಅವಧಿಯಲ್ಲೇ ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು.
ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಆರಂಭವಾಗಿ 50 ವರ್ಷಗಳಾದರೂ ಮುಗಿಯದ ಉದಾಹರಣೆಗಳಿವೆ. ಆದರೆ, ಬದ್ಧತೆ ಇರುವ ಪ್ರಧಾನಿ ಇದ್ದರೆ ವೇಗವಾಗಿ ಕೆಲಸ ಆಗುತ್ತದೆ ಎಂಬುದಕ್ಕೆ ಇದು ಸಾಕ್ಷಿ. ವಿರೋಧ ಪಕ್ಷದವರು ಸುಳ್ಳು ಹೇಳಿಕೊಂಡು ಯೋಜನೆಯ ಯಶಸ್ಸಿನ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಜನರಿಗೆ ಸತ್ಯ ಗೊತ್ತಿದೆ. ಅವರನ್ನು ಮೋಸಗೊಳಿಸಲು ಸಾಧ್ಯವಿಲ್ಲ ಎಂದರು.