ಬೆಳಗಾವಿ: ಜಿಲ್ಲೆಯಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.
ನಗರಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಚುನಾವಣೆ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಭಾನುವಾರ ಬಾಗಲಕೋಟೆ, ಬೆಳಗಾವಿ, ಹಾಗೂ ವಿಜಯಪುರ ಜಿಲ್ಲೆಗಳ ಆಯ್ದ ಸಂಸದರು, ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರು.
‘ಪಕ್ಷದ ಕೆಲವು ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ. ಹಾಗಾಗಿ ಪ್ರಧಾನ ಪ್ರತ್ಯೇಕವಾಗಿ ನಾಯಕರ ಸಭೆ ನಡೆಸಿ, ಭಿನ್ನಮತ ಶಮನಗೊಳಿಸಲು ಪ್ರಯತ್ನಿಸಿದರು. ಎಲ್ಲರೂ ಒಂದಾಗಿ ಹೋಗುವಂತೆ ಸೂಚಿಸಿದರು’ ಎಂದು ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ.
ಮೂರೂ ಜಿಲ್ಲೆಗಳ ನಾಯಕರ ಸಮಗ್ರ ಮಾಹಿತಿ ಪಡೆದುಕೊಂಡ ಪ್ರಧಾನ, ‘ಬೆಳಗಾವಿ ಜಿಲ್ಲೆಗೆ ಶೀಘ್ರ ಬಂದು ಮತ್ತೊಂದು ಹಂತದ ಸಭೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ’ ಎಂದು ಹೇಳಿವೆ.
ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನಮ್ಮ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಬೆಳಗಾವಿ ಜಿಲ್ಲೆಯ ಹಲವು ಶಾಸಕರು ಒತ್ತಾಯಿಸಿದರು ಎನ್ನಲಾಗಿದೆ.
ಈ ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಸಂಸದರಾದ ಪಿ.ಸಿ.ಗದ್ದಿಗೌಡರ, ರಮೇಶ ಜಿಗಜಿಣಗಿ, ಈರಣ್ಣ ಕಡಾಡಿ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮತ್ತಿತರರು ಭಾಗವಹಿಸಿದ್ದರು.