ರಬಕವಿ-ಬನಹಟ್ಟಿ: ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಮತಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದು, ಅವರೇ ತೇರದಾಳ ಮತಕ್ಷೇತ್ರದ ಅಭ್ಯರ್ಥಿಯಾಗಿ ಮುಂದುವರೆಯಲಿದ್ದಾರೆ ಮತ್ತು ಈ ಬಾರಿಯೂ ಕೂಡಾ ಭಾರಿ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಮಂಗಳವಾರ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಟಹಟಿ ತಾಲೂಕಿನ ಬನಹಟ್ಟಿಯ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾಗೆ ಸರಿಸಮಾನರಲ್ಲ. ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ತಾವೇ ಮುಖ್ಯಮಂತ್ರಿಗಳಾಗುತ್ತೇವೆ ಎಂಬ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ಅವರ ಕನಸು ನನಸಾಗುವುದಿಲ್ಲ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ನೀಡಿರುವ ಜನಪರ ಕಾರ್ಯಕ್ರಮಗಳು, ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹಾಗೂ ಓಬಿಸಿಗಳಿಗೆ ನೀಡಿದ ಸೌಲಭ್ಯಗಳು ನಮ್ಮ ಗೆಲುವಿಗೆ ಸಹಕಾರಿಯಾಗಲಿವೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.