ಮಹಾರಾಷ್ಟ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಎರಡು ಬಾರಿ ಬೆದರಿಕೆ ಕರೆಗಳನ್ನು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನಾಗ್ಪುರ ಪೊಲೀಸರು ಬೆಳಗಾವಿ ಜೈಲಿನಿಂದ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ನಗರದ ಧಾಂತೋಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಪೂಜಾರಿಯನ್ನು ಹಿಂಡಲಗಾ ಜೈಲಿನಿಂದ ಬಂಧಿಸಿ ಬೆಳಗ್ಗೆ ವಿಮಾನ ಮೂಲಕವಾಗಿ ನಾಗ್ಪುರಕ್ಕೆ ಕರೆದೊಯ್ಯಲಾಗಿದೆ. ‘ಕೇಂದ್ರ ಸಚಿವರಿಗೆ ಬೆದರಿಕೆ ಕರೆಗಳನ್ನು ಮಾಡುವ ಹಿಂದಿನ ಉದ್ದೇಶವನ್ನು ತಿಳಿದುಕೊಳ್ಳಲು ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ನಾಗ್ಪುರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜನವರಿ 14 ರಂದು, ಜಯೇಶ್ ಪೂಜಾರಿ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬರು ನಾಗ್ಪುರ ನಗರದ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಬೆದರಿಕೆ ಕರೆ ಮಾಡಿ ರೂ. 100 ಕೋಟಿ ನೀಡದಿದ್ದರೆ ಗಡ್ಕರಿ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಕರೆ ಮಾಡಿದ ವ್ಯಕ್ತಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ನ ಸದಸ್ಯ ಎಂದು ಹೇಳಿಕೊಂಡಿದ್ದ. ಎರಡನೇ ಬಾರಿ ರೂ. 10 ಕೋಟಿ ಪಾವತಿಸದಿದ್ದರೆ ಗಡ್ಕರಿ ಅವರಿಗೆ ಹಾನಿ ಮಾಡುವುದಾಗಿ ಬೆದರಿಕೆ ಹಾಕುವ ಹೊಸ ಕರೆಗಳನ್ನು ಅದೇ ವ್ಯಕ್ತಿ ಮಾರ್ಚ್ 21 ರಂದು ಅವರ ಕಚೇರಿಗೆ ಮಾಡಿದ್ದಾರೆ. ಈ ಪ್ರಕರಣದ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.