ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 31 ರಂದು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸರಳ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ.ಹಿರೇಮಠ ಅವರು ತಿಳಿಸಿದರು.
ಮಹರ್ಷಿ ವಾಲ್ಮೀಕಿ ಅವರ ಜಯಂತಿಯ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಷಿ ವಾಲ್ಮೀಕಿ ಜಯಂತಿಯ ದಿನದಂದು ಕಿಲ್ಲಾಕೋಟೆ ಬಳಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಂತಿಗೆ ಚಾಲನೆ ನೀಡಲಾಗುವುದು. ಕುಮಾರ ಗಂಧರ್ವ ರಂಗಮಂದಿರದಲ್ಲಿ ಸಾಂಕೇತಿಕವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಪ್ರತಿ ವರ್ಷದಂತೆ ಈ ವರ್ಷವು ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ಆದರೆ ಹೆಚ್ಚು ಜನ ಸೇರಲು ಅವಕಾಶ ಇರುವುದಿಲ್ಲ ಮತ್ತು ಮೆರವಣಿಗೆ ಮಾಡಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.
ಕಾರ್ಯಕ್ರಮದಲ್ಲಿ 100 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ತಾಲೂಕು ಮಟ್ಟದಲ್ಲಿ ಜಯಂತಿ ಆಚರಣೆ ಮಾಡಲಾಗುವುದು. ತಾಲೂಕು ಮಟ್ಟದಿಂದ ಜಿಲ್ಲಾ ಕೇಂದ್ರಕ್ಕೆ ಜನ ಬರದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಮಾಸ್ಕ್, ಸಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಪ್ರತಿ ವರ್ಷದಂತೆ ಈ ವರ್ಷವೂ ಉಪನ್ಯಾಸಕರನ್ನು ಕರೆಸಲಾಗುವುದು. ಯಾವದೇ ರೀತಿಯ ಗೊಂದಲಕ್ಕೆ ಆಸ್ಪದ ನೀಡದೇ ಸರ್ಕಾರದ ಮಾರ್ಗಸೂಚಿ ಪ್ರಕಾರ ಅರ್ಥಪೂರ್ಣವಾಗಿ ಜಯಂತಿ ಆಚರಣೆ ಮಾಡೋಣ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದರು.
ವಾಲ್ಮೀಕಿ ಸಮಾಜದ ಮುಖಂಡರು ಮಾತನಾಡಿ, ಪಂಚಾಯತಿ ಮಟ್ಟದಲ್ಲಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ವಿನಂತಿಸಿದರು.
ಜಿಲ್ಲಾ ಪಂಚಾಯತ ಸಿ.ಇ.ಒ. ದರ್ಶನ ಎಚ್.ವಿ., ಡಿ.ಸಿ.ಪಿ. ಡಾ. ವಿಕ್ರಮ ಅಮಟೆ, ಅಪರ ಜಿಲ್ಲಾಧಿಕಾರಿ ಅಶೋಕ ದುಟಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.