Karnataka Elections 2023: ಕೇಂದ್ರ ಚುನಾವಣಾ ಆಯೋಗವು ( Election commission of India ) ಕರ್ನಾಟಕ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಚುನಾವಣಾ ಆಯೋಗದ ಪ್ರಕಾರ, ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಘೋಷಣೆಯಾಗಲಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್ ( Congress ) ಘಟಕದ ಅಧ್ಯಕ್ಷ ಡಿ ಕೆ ಶಿವಕುಮಾರ್ ( D K Shivakumar ), ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ‘ಬಿಜೆಪಿ ಹಗಲುಗನಸು ಕಾಣುತ್ತಿದೆ. ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರಿಗೆ ತಿಳಿದಿದೆ. ಕರ್ನಾಟಕದಲ್ಲಿ ಹೊಸ ಕಾಂಗ್ರೆಸ್ ಎಂಜಿನ್ ಬರಲಿದೆ’ ಎಂದು ತಿಳಿಸಿದ್ದಾರೆ.
ಮೋದಿಯವರ ಜನಪ್ರಿಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಶಿವಕುಮಾರ್, ‘ಮೋದಿ ಜನಪ್ರಿಯತೆ ರಾಜ್ಯದಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಬಾರಿ 40 ಪರ್ಸೆಂಟ್ ಕಮಿಷನ್ ಸರ್ಕಾರ ತೊಲಗುತ್ತದೆ’ ಎಂದು ಹೇಳಿದ್ದಾರೆ.
ಕನ್ನಡಿಗರು ಇಷ್ಟು ದಿನ ಕಾಯುತ್ತಿದ್ದ ದಿನಾಂಕ ಪ್ರಕಟವಾಗಿದೆ. ಬಿಜೆಪಿಯ ದಿನಾಂಕ ಇಂದು ಮುಕ್ತಾಯಗೊಂಡಿದೆ. ಮೇ 10 ರಂದು ಬಿಜೆಪಿಯನ್ನು ನೇಣಿಗೇರಿಸುತ್ತೇವೆ ಎಂದು ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ನಮ್ಮ ಜನರಿಗೆ ಅಭಿವೃದ್ಧಿ ಮತ್ತು ಪಾರದರ್ಶಕತೆಯನ್ನು ಮರಳಿ ತರಬಲ್ಲದು ಎಂದು ಅವರು ಟ್ವಿಟರ್ನಲ್ಲಿ ಹೇಳಿದ್ದಾರೆ.
‘ಈಗ ಕರ್ನಾಟಕದಲ್ಲಿ ಹೊಸ ಪ್ರಗತಿಪರ ಭವಿಷ್ಯದ ಅಲೆ ಶುರುವಾಗಿದ್ದು, ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಯನ್ನು ಉತ್ಸಾಹದಿಂದ ಸ್ವಾಗತಿಸುತ್ತೇವೆ, ಈ ಮೂಲಕ ಕಾಂಗ್ರೆಸ್ ಪಕ್ಷ ಜನರಿಗೆ ಅಭಿವೃದ್ಧಿ ಮತ್ತು ಪಾರದರ್ಶಕತೆಯನ್ನು ಮರಳಿ ನೀಡಲು ಸಜ್ಜಾಗಿದೆ’ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ‘ಈ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. 40 ಪರ್ಸೆಂಟ್ ಸರ್ಕಾರದಿಂದ ಜನರು ಬೇಸತ್ತಿದ್ದಾರೆ. ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಮತ್ತು ನಿರುದ್ಯೋಗವು ಅತ್ಯಧಿಕವಾಗಿದೆ. ಈ ಬಾರಿ ಎಲ್ಲ ಕಡೆಯೂ ಕಾಂಗ್ರೆಸ್ ಗೆಲ್ಲಲಿದೆ’ ಎಂದು ಹೇಳಿದ್ದಾರೆ.
224 ಸ್ಥಾನಗಳ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.
ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಏಕೈಕ ರಾಜ್ಯ ಕರ್ನಾಟಕವಾಗಿದ್ದು, 2018 ರ ಚುನಾವಣೆಯಲ್ಲಿ 224 ಸದಸ್ಯ ಬಲದ ವಿಧಾನಸಭೆಯಲ್ಲಿ 104 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮತ್ತೊಂದೆಡೆ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದರೆ, ಜನತಾ ದಳ ( ಜಾತ್ಯತೀತ ) 37 ಸ್ಥಾನಗಳನ್ನು ಗಳಿಸಿತು. ಆದರೆ, ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ರಚಿಸಿದವು, ನಂತರದ ಎಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಜುಲೈ 2019 ರಲ್ಲಿ, ಕೆಲವು ಕಾಂಗ್ರೆಸ್-ಜೆಡಿ ( ಎಸ್ ) ಶಾಸಕರ ಬಂಡಾಯವು ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಯಿತು. ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳಿತು. ಜುಲೈ 2021 ರಲ್ಲಿ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.