ಗದಗ/ದಾವಣಗೆರೆ/ಕೊಪ್ಪಳ: ಒಳ ಮೀಸಲಾತಿ ವಿರೋಧಿಸಿ ಬಂಜಾರ, ಲಂಬಾಣಿ ವಡ್ಡರ, ಕೊರಚ, ಕೊರಮ ಸೇರಿದಂತೆ ಪರಿಶಿಷ್ಟ ಜಾತಿಯ ವಿವಿಧ ಸಮಾಜದವರು ರಾಜ್ಯದ ವಿವಿಧೆಡೆ ಗುರುವಾರವೂ ಪ್ರತಿಭಟಿಸಿದರು.
ಗದಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಈ ಸಮುದಾಯಗಳ ಜನರು, ‘ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದರೂ ಶಾಸಕರು, ಸಂಸದರು ಚಕಾರ ಎತ್ತುತ್ತಿಲ್ಲ.
ಇಂತಹ ಶಾಸಕರು ಸಮುದಾಯದ ಪಾಲಿಗೆ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿ, ಅವರೆಲ್ಲರಿಗೆ ಎಳ್ಳುನೀರು ಬಿಟ್ಟು, ತಲೆ ಬೋಳಿಸಿಕೊಂಡು ಶ್ರದ್ಧಾಂಜಲಿ ಅರ್ಪಿಸಿ ಪಿಂಡಪ್ರದಾನ ಮಾಡಿದರು.
ಕಿತ್ತೂರು ರಾಣಿ ಚೆನ್ನಮ್ಮನ ಪುತ್ಥಳಿ ಎದುರು ಜಮಾಯಿಸಿದ್ದ ಪ್ರತಿಭಟನಕಾರರು ಸರ್ಕಾರ ದಲಿತರನ್ನು ಒಡೆದು ಆಳುತ್ತಿದೆ ಎಂದು ಟೀಕಿಸಿದರು. ಒಳ ಮೀಸಲಾತಿ ಹಿಂಪಡೆಯದಿದ್ದರೆ ಎಲ್ಲ ತಾಂಡಾ, ಹಾಡಿ, ಹಟ್ಟಿಗಳಲ್ಲಿ ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದು ಶಪಥ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಚುನಾವಣಾ ಬಹಿಷ್ಕಾರ ಎಚ್ಚರಿಕೆ (ಕನಕಗಿರಿ, ಕೊಪ್ಪಳ ಜಿಲ್ಲೆ):
ಒಳಮೀಸಲಾತಿ ಕುರಿತು ಸರ್ಕಾರದ ನಿರ್ಣಯವನ್ನು ವಿರೋಧಿಸಿ ಕನಕಗಿರಿ ತಾಲ್ಲೂಕಿನ ಅಡವಿಬಾವಿ ಚಿಕ್ಕತಾಂಡಾದ ಲಂಬಾಣಿಗರು ಚುನಾವಣಾ ಬಹಿಷ್ಕಾರ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಗ್ರಾಮದಲ್ಲಿ ಬ್ಯಾನರ್ಗಳನ್ನು ಹಾಕಲಾಗಿದೆ. ಒಂದು ಬ್ಯಾನರ್ನಲ್ಲಿ ‘ಬಿಜೆಪಿಯ ಎಲ್ಲಾ ನಾಯಕರ ಹಾಗೂ ಮುಖಂಡರ ಪ್ರವೇಶವನ್ನು ಗ್ರಾಮಕ್ಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ’ ಎಂದು ಬರೆದಿದ್ದರೆ, ಮತ್ತೊಂದು ಬ್ಯಾನರ್ನಲ್ಲಿ,’ನಮ್ಮ ತಾಂಡಾಕ್ಕೆ ಎಲ್ಲಾ ಪಕ್ಷಗಳ ಮುಖಂಡರ ಪ್ರವೇಶ ನಿಷೇಧಿಸಲಾಗಿದೆ’ ಎಂದು ಬರೆಯಲಾಗಿದೆ.
‘ಬಂಜಾರರು ಶೈಕ್ಷಣಿಕ, ಸಾಮಾಜಿಕ, ರಾಜಕೀಯ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಸದಾಶಿವ ಆಯೋಗದ ಶಿಫಾರಸು ಒಪ್ಪಿದರೆ, ಸಮುದಾಯಕ್ಕೆ ಅನ್ಯಾಯವಾಗಲಿದೆ’ ಎಂದು ಶಿವಪ್ಪ ಚವ್ಹಾಣ ಹೇಳಿದರು.