ಬೆಂಗಳೂರು, ಅ.18- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಾಳೆಯಿಂದ ಪ್ರವಾಹ ಪೀಡಿತ ಬಾದಾಮಿ ಕ್ಷೇತ್ರದಲ್ಲಿ ಎರಡು ದಿನ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ವಿಮಾನದಲ್ಲಿ ತೆರಳುವ ಸಿದ್ದರಾಮಯ್ಯ ಅವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ತಲುಪಿ ನಂತರ ತಮ್ಮ ಸ್ವಕ್ಷೇತ್ರವಾದ ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ 12.30ಕ್ಕೆ ತಲುಪಲಿದ್ದಾರೆ.
ಬಾದಾಮಿಯಲ್ಲಿ ಕೆಡಿಪಿ ಸಭೆ ನಡೆಸಿ ಅಂದು ಅಲ್ಲೆ ವಾಸ್ತವ್ಯ ಹೂಡಲಿದ್ದಾರೆ. ಮಾರನೇ ದಿನ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ನೆರೆ ಪೀಡಿತ ಕೆಂದೂರು, ಕಾತರಕಿ, ಬೇಲೂರು, ಜಾಲಿಹಾಳ, ಕೆರೂರು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಅಲ್ಲಿಂದ ಸಂಜೆ ಧಾರವಾಡಕ್ಕೆ ಆಗಮಿಸಲಿದ್ದಾರೆ.ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿ ಅ.21ರಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ನಾಯಕರ ಮುಖಂಡರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಳಿಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ. ಅ.22 ಮತ್ತು 23ರಂದು ಶಿರಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ಪ್ರಚಾರ ನಡೆಸಲಿದ್ದಾರೆ.