ಬೀದರ್: ದಪ್ಪ ಚರ್ಮದ, ಕಿವಿ, ಕಣ್ಣು, ಹೃದಯ ಇಲ್ಲದ ಸರ್ಕಾರ ಇದು. ಇಲ್ಲಿಯವರೆಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹಕ್ಕೆ ಸಿಲುಕಿ ಸಂಕಷ್ಟಕ್ಕೆ ಒಳಗಾದವರಿಗೆ ಇಲ್ಲಿಯವರೆಗೆ ಸ್ಪಂದನೆ ಇಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯಾ, ಯಾವಾಗ ಪರಿಹಾರ ಬಿಡುಗಡೆ ಮಾಡುತ್ತಾರೆ, ರೈತರು ಸತ್ತ ಮೇಲೆ ಪರಿಹಾರ ಕೊಡತ್ತಾರಾ? ಇದರಲ್ಲೂ ರಾಜಕೀಯ ಮಾಡೋದು ಬಿಡಿ.
ಎಲ್ಲರೂ ಉಪ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ವಿಷಯದಲ್ಲಿ ಬಿಜೆಪಿ ನಾಟಕ ಮಾಡುತ್ತಿದೆ. ಪ್ರತಿ ಎಕರೆಗೆ 50 ಸಾವಿರ ರೂ. ವಿಶೇಷ ಪ್ಯಾಕೇಜ್ ಕೊಡಬೇಕು ಎಂದು ಖಂಡ್ರೆ ಆಗ್ರಹಿಸಿದರು.ಪ್ರವಾಹ ಪೀಡಿತ ಪ್ರದೇಶದಲ್ಲಿ ಅ.21 ರಂದು ಸಿಎಂ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿಯಲ್ಲಿ ಮಾತ್ರ ವೈಮಾನಿಕ ಸಮೀಕ್ಷೆ ನಡೆಸಲಾಗುತ್ತಿದೆ. ವೈಮಾನಿಕ ಸಮೀಕ್ಷೆ ಪಟ್ಟಿಯಲ್ಲಿ ಬೀದರ್ ಜಿಲ್ಲೆ ಯಾಕೆ ಇಲ್ಲ? ಸಿಎಂ ಬೀದರ್ ಜಿಲ್ಲೆಗೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ಸಿಎಂಗೆ ಒತ್ತಾಯ ಮಾಡುತ್ತೇನೆ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ಮಾಡಿ, ಜೊತೆಗೆ ಪ್ರಗತಿ ಪರಿಶೀಲನೆ ಮಾಡಿ, ಪರಿಹಾರ ಘೋಷಿಸಿ ಎಂದು ಅವರು ಒತ್ತಾಯಿಸಿದರು.