ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ( Karnataka Assembly Election 2023 ) ರಂಗೇರಿದೆ. ಈ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಸಿನೆಮಾ ಕಲಾವಿದರ ಕಾರ್ಯಕ್ರಮಗಳ ಪ್ರಸಾರವನ್ನು ಚುನಾವಣೆ ಮುಗಿಯುವ ತನಕ ನಿಲ್ಲಿಸುವಂತೆ ಚುನಾವಣಾ ಆಯೋಗಕ್ಕೆ KRS ಪಕ್ಷದ ಆಗ್ರಹಿಸಿದೆ.
ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರು ಬರೆದಿದ್ದಾರೆ. ಆ ಪತ್ರದಲ್ಲಿ ಚುನಾವಣಾ ಪ್ರಚಾರಕ್ಕೆಂದು ( Election Campaigns ) ಕೆಲವು ಪಕ್ಷಗಳು ಮತ್ತು ಅಭ್ಯರ್ಥಿಗಳು ಸಿನಿಮಾ ನಟ-ನಟಿಯರನ್ನು ಕರೆಸಿಕೊಳ್ಳುತ್ತಾರೆ. ಯಾವುದೇ ಪಕ್ಷದ ಸದಸ್ಯರಲ್ಲದಂತಹ ಕಲಾವಿದರು ಬಹುತೇಕವಾಗಿ ಹಣ ಪಡೆದು ಪ್ರಚಾರಕ್ಕೆ ತೆರಳುತ್ತಾರೆ. ಈ ನಿಟ್ಟಿನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗುವಂತ ಸಿನಿಮಾ ಕಲಾವಿಧರ ಕಾರ್ಯಕ್ರಮವನ್ನು ದೃಶ್ಯಮಾಧ್ಯಮಗಳಲ್ಲಿ ನಿರ್ಬಂಧಿಸುವಂತೆ ಆಗ್ರಹಿಸಿದ್ದಾರೆ.
ಕನ್ನಡ ಸಿನಿಮಾರಂಗದ ಹಿರಿಯ ಕಲಾವಿದ ಕಿಚ್ಚ ಸುದೀಪ್ ಅವರು ಬಿಜೆಪಿ ಪಕ್ಷದ ಮುಖಂಡರೊಂದಿಗೆ ನಿನ್ನೆ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾಮರ ಪರವಾಗಿ ಮತ್ತು ಅವರು ಹೇಳಿದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಮಾಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇದೇ ರೀತಿ ಇನ್ನೂ ಹಲವು ಕಲಾವಿಧರು ವಿವಿಧ ಪಕ್ಷ, ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಅಕ್ರಮ ಪ್ರಲೋಭನೆ ಮತ್ತು ಅನುಚಿತ ಪ್ರಭಾವ ಇಲ್ಲದೇ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಾತ್ರಿ ಪಡಿಸುವ ನಿಟ್ಟಿನಲ್ಲಿ ತಾವು ಈ ಕೂಡಲೇ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವಂತ ಎಲ್ಲಾ ಕಲಾವಿಧರ ಕಾರ್ಯಕ್ರಮಗಳನ್ನು ಎಲ್ಲಾ ದೃಶ್ಯ ಮಾಧ್ಯಮಗಳಲ್ಲಿ ಚುನಾವಣೆ ಮುಗಿಯುವ ತನಕ ನಿರ್ಬಂಧಿಸುವಂತೆ ಒತ್ತಾಯಿಸಿದ್ದಾರೆ