ಬೆಂಗಳೂರು : ನಗರದಲ್ಲಿ ಇಂದು ಸುರಿದ ಭಾರಿ ಮಳೆಯಿಂದ ಕೆ. ಆರ್. ವೃತ್ತದ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು.
ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತಿ ಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ? ಎಂದು ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.