ಬೆಂಗಳೂರು,ಅ.23- ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಡಿಸೆಂಬರ್ 10ರೊಳಗೆ ರಾಜ್ಯ ಸರ್ಕಾರ ಅಕೃತವಾಗಿ ಆದೇಶ ಹೊರಡಿಸದಿದ್ದರೆ ಸಮುದಾಯದ ಸಚಿವರು ಮತ್ತು ಶಾಸಕರು ರಾಜೀನಾಮೆ ನೀಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ
.ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ ಹೊರಡಿಸಲೇಬೇಕು. ಡಿಸೆಂಬರ್ 10ರೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ ವಾಲ್ಮೀಕಿ ಸಮುದಾಯದ ಸಚಿವರು ಮತ್ತು ಶಾಸಕರು ಹಾಲಿಯಿಂದ ಮಾಜಿಯಾಗಲು ಸಿದ್ದರಿದ್ದಾರೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ನಿವಾಸದಲ್ಲಿ ಪತ್ರಿಕಾಗೋಷ್ಟಿ ನಡೆಸಿದ ವಾಲ್ಮೀಕಿ ಮಹಾಸಂಸ್ಥಾನದ ಸ್ವಾಮೀಜಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಪ್ರಸ್ತುತ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ, ಕೋವಿಡ್ ಹಾಗೂ ಭೀಕರ ಪ್ರವಾಹ ಇರುವ ಹಿನ್ನೆಲೆಯಲ್ಲಿ ತಾವು ನಡೆಸುತ್ತಿದ್ದ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ಹಿಂದೆ ತೆಗೆದುಕೊಂಡಿದ್ದೇನೆ. ನೀತಿ ಸಂಹಿತೆ ಮುಗಿದ ಒಂದು ತಿಂಗಳೊಳಗೆ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಲೇಬೇಕೆಂದು ಆಗ್ರಹಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಧರಣಿ ಸತ್ಯಾಗ್ರಹವನ್ನು ಹಿಂಪಡೆಯಬೇಕೆಂದು ಮಾಡಿಕೊಂಡ ಮನವಿ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈ ಬಿಡಲಾಗಿದೆ. ಸಚಿವರಾದ ಶ್ರೀರಾಮುಲು, ರಮೇಶ್ ಜಾರಕಿಹೊಳಿ, ಸಂಸದರಾದ ರಾಜಾ ಅಮರೇಶ್ ನಾಯಕ್, ದೇವೇಂದ್ರಪ್ಪ, ಶಾಸಕರು ಹಾಗೂ ಸಮುದಾಯದ ಮುಖಂಡರು ಮಾಡಿಕೊಂಡ ಮನವಿ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈಬಿಡಲಾಗಿದೆ. ನಮಗೆ ಮುಖ್ಯಮಂತ್ರಿಗಳ ಮೇಲೆ ಭರವಸೆ ಇದೆ ಎಂದು ಹೇಳಿದರು.
ವಾಲ್ಮೀಕಿ ಸಮುದಾಯಕ್ಕೆ ಸಾಂವಿಧಾನಿಕವಾಗಿ ಮೀಸಲಾತಿ ನಿಡುವುದು ಸರ್ಕಾರದ ಕರ್ತವ್ಯ. ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ವಾಲ್ಮೀಕಿ ಸಮುದಾಯ ಹಿಂದುಳಿದಿದೆ. ನಮ್ಮ ಬೇಡಿಕೆ ನ್ಯಾಯಬದ್ದವಾಗಿದೆ ಎಂದು ಸ್ವಾಮೀಜಿ ಸಮರ್ಥಿಸಿಕೊಂಡರು.
ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ನೀತಿ ಸಂಹಿತೆ ಮುಗಿದ ಬಳಿಕ ಪುನಃ ಧರಣಿ ನಡೆಸಲು ಹಿಂಜರಿಯುವುದಿಲ್ಲ. ಮುಖ್ಯಮಂತ್ರಿಗಳ ಮೇಲೆ ನಮಗೆ ವಿಶ್ವಾಸ ಇರುವುದರಿಂದ ಧರಣಿಯನ್ನು ಕೈಬಿಟ್ಟಿದ್ದೇವೆ ಎಂದು ತಿಳಿಸಿದರು. ಶಾಸಕ ರಾಜುಗೌಡ ನಾಯಕ್ ಮಾತನಾಡಿ, ಪ್ರಸ್ತುತ ದಿನದಲ್ಲಿ ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಸ್ವಾಮೀಜಿಗೆ ನಾವು ಮನವಿ ಮಾಡಿಕೊಂಡೆವು.
ಒಂದು ಕಡೆ ಪ್ರವಾಹ ಮತ್ತೊಂದು ಕಡೆ ಕೋವಿಡ್ ಹಾಗೂ ನೀತಿ ಸಂಹಿತೆ ಇರುವ ಕಾರಣ ಅಮರಣಾಂತ ಉಪವಾಸ ಕೈಗೊಳ್ಳುವುದು ಸರಿಯಲ್ಲ ಎಂದು ಸ್ವಾಮೀಜಿಗೆ ಮನವರಿಕೆ ಮಾಡಿಕೊಟ್ಟೆವೆ. ಮುಖ್ಯಮಂತ್ರಿಗಳ ಮೇಲೆ ನಮಗೆ ಅಪಾರವಾದ ನಂಬಿಕೆಯಿದೆ. ಕೊಟ್ಟ ಮಾತಿನಿಂದ ಎಂದು ಅವರು ಹಿಂದೆ ಸರಿದವರಲ್ಲ. ನೀತಿ ಸಂಹಿತೆ ಮುಗಿದ ಬಳಿಕ ಬಹುದಿನಗಳ ಬೇಡಿಕೆ ಈಡೇರಿಸುವ ಸಾದ್ಯತೆ ಇದೆ ಎಂದು ತಿಳಿಸಿದರು. ಪತ್ರಿಕೋಷ್ಟಿಯಲ್ಲಿ ಶಾಸಕರು, ಮತ್ತು ಸಮುದಾಯ ಮುಖಂಡರು ಉಪಸ್ಥಿತರಿದ್ದರು.