ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯದ ನೂತನ ಕಾಂಗ್ರೆಸ್ ಸರಕಾರಿ ಆದೇಶ ಹೊರಡಿಸಿದೆ.
ಶೇ.31ರಿಂದ 35ಕ್ಕೆ ಡಿಎ ಹೆಚ್ಚಳ ಮಾಡಲಾಗಿದೆ. ಇದು ಜನೆವರಿ 1ರಿಂದ ಪೂರ್ವಾನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ಕಾರದ ಆದೇಶ ಸಂಖ್ಯೆ: ಆಇ ೧ ಎಸ್ಆರ್ಪಿ 2023 ಬೆಂಗಳೂರು, ದಿನಾಂಕ: 30ನೇ ಮೇ 2023
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2023 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.
2. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,
(ಅ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ವೈಯಕ್ತಿಕ ವೇತನ,
(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.