ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ, ವೈದ್ಯರು ಮೊಬೈಲ್ ಟಾರ್ಚ್ ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಕಂಡು ಇಲ್ಲಿನ ಅವ್ಯವಸ್ಥೆಯ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಸ್ಪತ್ರೆಯಲ್ಲಿ ಹಗಲು ವೇಳೆಯಲ್ಲಿ ಇಬ್ಬರು ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದು, ರಾತ್ರಿ ವೇಳೆ ವೈದ್ಯರು ಯಾರೊಬ್ಬರು ಕರ್ತವ್ಯದಲ್ಲಿ ಇರುವುದಿಲ್ಲ ಈ
ಬಗ್ಗೆ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ವೈಧ್ಯಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮೇಲಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ಪ ಮಾತನಾಡಿ, ನಿನ್ನೆ ರಾತ್ರಿ 7:30 ಇಲ್ಲಿನ ಪಕ್ಕದ ಹಳ್ಳಿಯಿಂದ ಮೃತದೇಹವೊಂದನ್ನು ತಂದು ಶವಗಾರದಲ್ಲಿ ಇಟ್ಟಿದ್ದಾರೆ. ಅಲ್ಲಿ ವಿದ್ಯುತ್ ಸಂಪರ್ಕವೇ ಇಲ್ಲ ವೈದ್ಯರು ಹೇಗೆ ಮರಣೋತ್ತರ ಪರೀಕ್ಷೆಯನ್ನು ನಡೆಸುತ್ತಾರೆ ಎಂದು ಯಾರೊಬ್ಬರು ಕರೆ ಮಾಡಿ ನನಗೆ ಮಾಹಿತಿ ನೀಡಿದರು. ಬೇಜಾರಾಗಬೇಡಿ ನಾನು ವೈದ್ಯರಿಗೆ ಹೇಳುತ್ತೇನೆ ಎಂದು ಅವರಿಗೆ ಹೇಳಿದೆ. ಹೀಗಾಗಿ ಕೂಡಲೇ 24 ಗಂಟೆ ಶವಗಾರಕ್ಕೆ ವಿದ್ಯುತ್ ಸಂಪರ್ಕ ಒದಗಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.