Home / ರಾಜಕೀಯ / ಜಾಮೀನು ಕೋರಿ ಮುರುಘಾ ಶರಣರಿಂದ ಹೈಕೋರ್ಟ್​ಗೆ ಅರ್ಜಿ

ಜಾಮೀನು ಕೋರಿ ಮುರುಘಾ ಶರಣರಿಂದ ಹೈಕೋರ್ಟ್​ಗೆ ಅರ್ಜಿ

Spread the love

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಸ್ವರೂಪದ ಪ್ರಕರಣದಲ್ಲಿ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮುರುಘಾ ಶರಣರ ಪರವಾಗಿ ವಕೀಲ ಸಂದೀಪ್‌ ಪಾಟೀಲ್‌ ಬುಧವಾರ ಅರ್ಜಿ ದಾಖಲಿಸಿದರು.

ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ ಪೊಲೀಸ್‌ ಠಾಣೆಯಲ್ಲಿ 2022ರ ಆಗಸ್ಟ್‌ 26ರಂದು ದೂರು ದಾಖಲಿಸಿದ ನಂತರ ಪೊಲೀಸರು ಶರಣರನ್ನು 2022ರ ಸೆಪ್ಟೆಂಬರ್ 1ರಂದು ಚಿತ್ರದುರ್ಗದ ಬೃಹನ್ಮಠದಲ್ಲಿ ಬಂಧಿಸಿದ್ದರು. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಕಾನೂನು ವಿಚಾರಣೆಯ ವಿವಿಧ ಹಂತಗಳ ಪ್ರಕ್ರಿಯೆ ಎದುರಿಸುತ್ತಿದ್ದಾರೆ.

ಈ ನಡುವೆ, ಶರಣರ ವಿರುದ್ಧ ಚಿತ್ರದುರ್ಗ ಜಿಲ್ಲಾ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕ್ರಿಮಿನಲ್‌ ಪ್ರಕರಣಗಳ ಸಾಕ್ಷಿ ವಿಚಾರಣಾ ಪ್ರಕ್ರಿಯೆಗೆ 2023ರ ಜುಲೈ 1ರವರೆಗೆ ತಡೆ ನೀಡಿದೆ. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿತ್ತು.

 

ಪ್ರಕರಣದ ಹಿನ್ನೆಲೆ: ಮುರುಘಾ ಮಠದ ಹಾಸ್ಟೆಲ್​ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಆಗಸ್ಟ್ 26 ರಂದು ಮೈಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣ ದಾಖಲಾದ ಎರಡು ದಿನಗಳ ನಂತರ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಕ್ಟೋಬರ್‌ನಲ್ಲಿ ಶ್ರೀಗಳ ವಿರುದ್ಧ ಇನ್ನೂ ಕೆಲವು ಬಾಲಕಿಯರು ಇಂತಹುದೇ ದೂರು ನೀಡಿದ್ದರು.

 

ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ-2012, ಭಾರತೀಯ ದಂಡ ಸಂಹಿತೆ-1860, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ-1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆ-2015ರ ವಿವಿಧ ಕಲಂಗಳ ಅಡಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಸೆಷನ್ಸ್‌ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿತ್ತು. ಇದೇ ಆರೋಪದಲ್ಲಿ ಪೊಲೀಸರು ಶರಣರನ್ನು 2022ರ ಸೆಪ್ಟೆಂಬರ್ 1ರಂದು ಚಿತ್ರದುರ್ಗದ ಬೃಹನ್ಮಠದಲ್ಲಿ ಬಂಧಿಸಿದರು. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ