ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕಡಿಮೆಯಾಗಿದೆ.
ಬಿಸಿಲ ತಾಪಕ್ಕೆ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ ತುಂಗಭದ್ರಾ ಜಲಾಶಯವು ಬಹುತೇಕ ಖಾಲಿಯಾಗಿದೆ. ಇಲ್ಲಿನ ನೀರಿನ ಮಟ್ಟ ಡೆಡ್ ಸ್ಟೋರೇಜ್ ಹಂತ ತಲುಪಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಕೆಲವು ಜಿಲ್ಲೆಗಳಿಗೆ ಈ ಜಲಾಶಯದ ನೀರು ಅಗತ್ಯ. ರಾಜ್ಯದ ಹಲವು ಕಡೆ ಮಳೆಯಗುತ್ತಿದ್ದರೂ, ಈ ಭಾಗದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆ ಬಿದ್ದಿಲ್ಲ.
ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 105.79 ಟಿಎಂಸಿ ಇದೆ. ಸುಮಾರು 10 ಲಕ್ಷ ಹೆಕ್ಟೇರ್ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಕಳೆದ ವರ್ಷ ಈ ಸಂದರ್ಭದಲ್ಲಿ 35 ಕ್ಕೂ ಹೆಚ್ಚು ಟಿಎಂಸಿ ನೀರು ಸಂಗ್ರಹವಾಗಿತ್ತು. ಜಲಾಶಯದಲ್ಲಿ ನೀರು ಸಂಗ್ರಹವಿಲ್ಲದೆ ಈ ಬಾರಿ ರೈತರಿಗೆ ಸಂಕಷ್ಟ ಎದುರಾಗುವ ಆತಂಕ ಕಾಡುತ್ತಿದೆ.
2023ರ ಜನವರಿಯಿಂದ ಮೇ 31ರವರೆಗೆ 129 ಮಿ.ಮೀ ಸಾಮಾನ್ಯ ಪೂರ್ವ ಮುಂಗಾರು ಮಳೆಯಾಗಬೇಕಿತ್ತು. ಆದರೆ, ರಾಜ್ಯದಲ್ಲಿ ಕೇವಲ 39.7 ಮಿ.ಮೀ ಮಳೆಯಾಗಿದೆ. ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ ಶೇ.3 ರಷ್ಟು ನೀರು ಸಂಗ್ರಹವಿದೆ. ಇನ್ನು ಕಾವೇರಿ ಜಲಾನಯನ ಪ್ರದೇಶಗಳ ಜಲಾಶಯಗಳಲ್ಲಿ 40.74 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ ವರ್ಷ ಇದೇ ವೇಳೆ 57.32 ಟಿಎಂಸಿ ನೀರು ಸಂಗ್ರಹವಾಗಿತ್ತು. ಕಷ್ಣಾ ಜಲಾನಯನ ಪ್ರದೇಶದಲ್ಲಿ ಕಳೆದ ವರ್ಷ 132.98 ಟಿಎಂಸಿ ನೀರು ಇತ್ತು. ಈ ಸಲ 99.09 ಟಿಎಂಸಿ ನೀರಿದೆ.
ಕೃಷ್ಣರಾಜಸಾಗರ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 124.80 ಅಡಿ ಇದ್ದು, ಪ್ರಸ್ತುತ 81.80 ಅಡಿ ನೀರಿನ ಮಟ್ಟ ತಲುಪಿದೆ. ಮಳೆ ಬಾರದಿದ್ದರೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಲಿದೆ. ಕಳೆದ ಐದು ವರ್ಷಗಳಿಂದ ಅಣೆಕಟ್ಟೆಯ ನೀರಿನ ಸಂಗ್ರಹದಲ್ಲಿ ಸುಧಾರಣೆ ಕಂಡು ಬಂದಿತ್ತು. ಆದರೆ, ಈ ವರ್ಷ ಅತಿ ಕಡಿಮೆ ಪ್ರಮಾಣದ ನೀರು ಸಂಗ್ರಹವಾಗಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಆತಂಕ ಎದುರಾಗಿದೆ.
ಬಿಸಿಲಿನ ಪ್ರಮಾಣ ಎಂದಿಗಿಂತ ಹೆಚ್ಚಿರುವುದು ಸಹ ಕೆಆರ್ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಲು ಕಾರಣ ಎಂದು ಹೇಳಲಾಗುತ್ತಿದೆ. ಅಲ್ಲದೆ, ಕಾವೇರಿ ಕೊಳ್ಳದ ಭಾಗದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದಿರುವುದು ಆತಂಕ ಮೂಡಿಸಿದೆ. 2016ರಲ್ಲಿ ಕೆಆರ್ಎಸ್ ಜಲಾಶಯವು ಡೆಡ್ ಸ್ಟೋರೆಜ್ ತಲುಪಿತ್ತು. 2017ರಲ್ಲಿ ಮುಂಗಾರು ಮಳೆ ಅಷ್ಟಾಗಿ ಬಾರದಿದ್ದರೂ ಹಿಂಗಾರು ಮಳೆ ಉತ್ತಮವಾಗಿ ಬಂದಿದ್ದರಿಂದ ಸಮಸ್ಯೆ ಉದ್ಭವಿಸಿರಲಿಲ್ಲ. ಇನ್ನು 2018 ರಲ್ಲೂ ರಾಜ್ಯದಲ್ಲಿ ಭಾರಿ ಮಳೆ ಸುರಿಯುವ ಮೂಲಕ ಪ್ರವಾಹವೇ ಸೃಷ್ಟಿಯಾಗಿತ್ತು. ಹಾಗಾಗಿ, ಜಲಾಶಯ ಭರ್ತಿಯಾಗಿತ್ತು. ಕಳೆದ ವರ್ಷ ಕೂಡ ನವೆಂಬರ್ನಲ್ಲಿ ಜಲಾಶಯ ಭರ್ತಿಯಾಗಿತ್ತು.
ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರದಿ ಪ್ರಕಾರ, ಏಪ್ರಿಲ್ ಅಂತ್ಯದ ವೇಳೆಗೆ 13 ಜಲಾಶಯಗಳಲ್ಲಿ ನೀರಿನ ಮಟ್ಟ ಸರಾಸರಿ ಶೇ.27ರಷ್ಟು ಇದೆ. ಮುಂಗಾರು ಪೂರ್ವ ಮಳೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಇದರ ಮಧ್ಯೆ ಕೆಆರ್ಎಸ್ ಜಲಾಶಯದಲ್ಲಿದ್ದ ನೀರನ್ನು ಬೇಸಿಗೆ ಬೆಳೆಗಳಿಗೆ ಹರಿಸಲಾಯಿತು. ಮುಂಗಾರು ಪೂರ್ವ ಮಳೆಯ ಕೊರತೆಯಿಂದ ಜಲಾಶಯದ ಸುತ್ತ ಮುತ್ತಲಿನ ಕೆರೆ ಕಟ್ಟೆಗಳಲ್ಲಿ ಅಲ್ಪಸ್ವಲ್ಪ ನೀರು ಮಾತ್ರ ಸಂಗ್ರಹವಾಗಿದೆ. ಈಗಾಗಲೇ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ಒಳಹರಿವಿಲ್ಲದೆ ಅಣೆಕಟ್ಟು ಸೊರಗಿದೆ. ಇದರ ಜೊತೆಗೆ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶದಂತೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ ನೀರುಹರಿಸುವ ಪರಿಸ್ಥಿತಿ ಸೃಷ್ಟಿಯಾಗಲಿದೆ. ಆಗ ಮತ್ತಷ್ಟು ಸಮಸ್ಯೆ ಎದುರಾಗಲಿದೆ. ವಿದ್ಯುತ್ ಉತ್ಪಾದನೆಗೂ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಶರಾವತಿ ನದಿಪಾತ್ರದಲ್ಲಿ ಮಳೆಯಾಗದಿದ್ದರೆ ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.