ಮದುರೈ,ಅ.24- ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದ್ದಂತೆ ತಮಿಳುನಾಡಿನ ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಬೆಂಕಿ ಮತ್ತು ಸ್ಫೋಟ ದುರಂತಗಳು ಮರುಕಳಿಸುತ್ತಿವೆ. ಮಧುರೈ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿ, ಐವರು ಮೃತಪಟ್ಟು, ಇತರ ಮೂವರಿಗೆ ಗಂಭೀರ ಗಾಯಗಳಾಗಿವೆ.
ಕಲ್ಲುಪಟ್ಟಿ ಪ್ರದೇಶದ ಪಟಾಕಿ ತಯಾರಿಕೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಭಾರೀ ಸ್ಫೋಟ ಸಂಭಸಿತು. ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವಿಗೀಡಾದರು.ಸುದ್ದಿ ತಿಳಿದ ಕೂಡಲೆ ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.ತೀವ್ರ ಗಾಯಗೊಂಡ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ತನಿಖೆಗೆ ಆದೇಶಿಸಲಾಗಿದೆ.