ಬೆಂಗಳೂರು: ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ.
ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
3 ಕೋಟಿ ಪ್ಯಾಕೇಜ್ ಗಿಟ್ಟಿಸಿದ ಎಲ್ಪಿಯು ಪದವೀಧರ!
ಇಂದಿರಾ ಕ್ಯಾಂಟಿನ್ ಆಹಾರಕ್ರಮದಲ್ಲಿ ಬದಲಾವಣೆ
ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ತಪ್ಪಿತಸ್ಥರ ವಿರುದ್ದ ತನಿಖೆ
ಕಲುಷಿತ ನೀರಿನ ಸೇವನೆಯಿಂದ ಕೊಪ್ಪಳದಲ್ಲಿ ಇಬ್ಬರು ಹಾಗೂ ರಾಯಚೂರಿನಲ್ಲಿ ಒಬ್ಬರು ಮೃತಪಟ್ಟಿದ್ದು , ತಪ್ಪಿತಸ್ಥರ ವಿರುದ್ದ ಸೂಕ್ತ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.