Breaking News
Home / ರಾಜಕೀಯ / ಕಳಪೆ ಬೀಜ ವಿತರಣೆ ಕಂಡು ಬಂದರೆ ಅಧಿಕಾರಿಗಳೇ ಹೊಣೆ : ಸಚಿವ ಚೆಲುವರಾಯಸ್ವಾಮಿ

ಕಳಪೆ ಬೀಜ ವಿತರಣೆ ಕಂಡು ಬಂದರೆ ಅಧಿಕಾರಿಗಳೇ ಹೊಣೆ : ಸಚಿವ ಚೆಲುವರಾಯಸ್ವಾಮಿ

Spread the love

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದು, ಬಿತ್ತನೆ ಕೂಡ ತಡವಾಗುತ್ತಿದೆ.

ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.

ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್​​ ಸಭಾಂಗಣದಲ್ಲಿ ಇಂದು ನಡೆದ ಅಧಿಕಾರಿಗಳ ವಿಭಾಗಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಬಿತ್ತನೆ ಬೀಜ ಮತ್ತು ಗೊಬ್ಬರದ ಬೇಡಿಕೆ, ಪೂರೈಕೆ ಹಾಗೂ ವಿತರಣೆ ಮೇಲೆ ನಿಗಾ ವಹಿಸಬೇಕು. ಮಳೆ ವಿಳಂಬವಾಗಿರುವುದರಿಂದ ರೈತರು ಕೂಡ ಆತಂಕದಲ್ಲಿರುತ್ತಾರೆ. ಆದ್ದರಿಂದ ಬೀಜ-ಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬರದಂತೆ ಎಚ್ಚರ ವಹಿಸಬೇಕು. ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಸಾಕಷ್ಟು ದಾಸ್ತಾನು ಇರುವುದರಿಂದ ಯಾವುದೇ ರೀತಿಯ ಸಮಸ್ಯೆ ಉದ್ಭವಿಸಬಾರದು. ಎಲ್ಲ ಅಧಿಕಾರಿಗಳು ಸಮನ್ವಯತೆ ಹಾಗೂ ಶಿಸ್ತಿನಿಂದ ಕೆಲಸ ಮಾಡಬೇಕು. ಸಮಸ್ಯೆ ಉಂಟಾದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಕ್ಯೂಆರ್ ಕೋಡ್ ಮೂಲಕ ಬೀಜ ವಿತರಣೆ ಮಾಡಲಾಗುತ್ತಿದ್ದು, ಕೆಲವೊಮ್ಮೆ ತಾಂತ್ರಿಕ ತೊಂದರೆ ಉಂಟಾದಾಗ ಪರ್ಯಾಯ ವ್ಯವಸ್ಥೆ ಕೂಡ ಮಾಡಿಕೊಳ್ಳಬೇಕು ಎಂದರು.

ಕಳಪೆ ಬೀಜ ವಿತರಣೆಯಾಗುತ್ತಿರುವ ಬಗ್ಗೆ ಕೆಲ ಜಿಲ್ಲೆಗಳಿಂದ ದೂರುಗಳು ಬರುತ್ತಿವೆ. ಈ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು. ಇಂತಹ ಘಟನೆಗಳು ಮರುಕಳಿಸಬಾರದು. ಇಂತಹ ಘಟನೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಪ್ರಮಾಣೀಕರಣ ಇಲ್ಲದೇ ಬೀಜ ಮಾರಾಟವನ್ನು ವಿಚಕ್ಷಣಾ ತಂಡಗಳು ಪತ್ತೆ ಮಾಡಬೇಕು. ಈ ರೀತಿಯ ಅಕ್ರಮ ಕಂಡುಬಂದರೆ ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಬೀಜ-ಗೊಬ್ಬರ ಮಾರಾಟ ಮಳಿಗೆಗಳನ್ನು ಸ್ವತಃ ಪರಿಶೀಲಿಸಿ ದಾಸ್ತಾನು ಲಭ್ಯತೆ ಹಾಗೂ ಸಮರ್ಪಕವಾಗಿ ವಿತರಣೆಗೆ ಕ್ರಮ ವಹಿಸಬೇಕು. ಇತ್ತೀಚೆಗೆ ಮಳೆಯಿಂದ ಉಂಟಾಗಿರುವ ಬೆಳೆಹಾನಿ ಕುರಿತು ಕೂಡಲೇ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ಪೋರ್ಟಲ್ ನಲ್ಲಿ ದತ್ತಾಂಶ ದಾಖಲಿಸಬೇಕು ಎಂದು ತಿಳಿಸಿದರು. ರೈತರ ದೂರುಗಳ ಸ್ವೀಕಾರ ಹಾಗೂ ಪರಿಹಾರ ಕ್ರಮಗಳನ್ನು ತ್ವರಿತಗೊಳಿಸಲು ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಬೇಕು. ತಕ್ಷಣವೇ ಸ್ಪಂದಿಸುವ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಈ ವೇಳೆ ಮಾತನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಅನ್ಬುಕುಮಾರ್, ಮುಂಗಾರು ಮಳೆ ವಿಳಂಬದಿಂದಾಗಿ ಏಕ ಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿರುವುದರಿಂದ ಬಿತ್ತನೆ ಬೀಜ, ರಸಗೊಬ್ಬರ ಲಭ್ಯತೆಯನ್ನು ರಾಜ್ಯದಾದ್ಯಂತ ಖಚಿತಪಡಿಸಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಇತ್ತೀಚೆಗೆ ಆಲಿಕಲ್ಲು ಮಳೆಯಿಂದ ಉಂಟಾದ ಹಾನಿಯ ಕುರಿತು ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ಕೂಡಲೇ ಪರಿಹಾರ ನೀಡಲಾಗುವುದು ಎಂದು ಅನ್ಬುಕುಮಾರ್ ತಿಳಿಸಿದರು.

ಬಿತ್ತನೆಗೆ ಅನುಕೂಲ ಆಗುವಂತೆ ಮಳೆ ಆಗಿಲ್ಲ: ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ 93 ಮಿ.ಮೀ. ಮಳೆಯಾಗಬೇಕಿತ್ತು. 86 ಮಿ.ಮೀ. ಮಳೆಯಾಗಿದ್ದು, ಶೇ.7ರಷ್ಟು ಮಳೆ ಕೊರತೆಯಾಗಿರುತ್ತದೆ. ಬೆಳಗಾವಿ ಜಿಲ್ಲೆಯಲ್ಲಿ 35 ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ 170 ಕೇಂದ್ರಗಳಲ್ಲಿ ಬೀಜ ವಿತರಣೆ ಮಾಡಲಾಗುತ್ತಿದೆ. 47,375 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನು ಇದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜಗಳ ಕೊರತೆ ಇರುವುದಿಲ್ಲ. ರಸಗೊಬ್ಬರ 2.25 ಲಕ್ಷ ಮೆಟ್ರಿಕ್ ಟನ್ ಲಭ್ಯವಿರುತ್ತದೆ. ಯಾವುದೇ ರೀತಿಯ ಕೊರತೆ ಇರುವುದಿಲ್ಲ. ಆದರೆ ಬಿತ್ತನೆಗೆ ಅನುಕೂಲ ಆಗುವಂತೆ ಮಳೆಯಾಗಿರುವುದಿಲ್ಲ ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು ಸಭೆಯಲ್ಲಿ ವಿವರಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ