ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರೀಕರ ನೋಂದಣಿ (ಎನ್ಆರ್ಸಿ) ಕುರಿತು ಬೀದರ್ ಶಾಹೀನ್ ಶಾಲೆಯ ಮಕ್ಕಳು ನಾಟಕ ಪ್ರದರ್ಶನ ಮಾಡಿದ್ದ ಕುರಿತಂತೆ ಶಾಲೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧ ದಾಖಲಿಸಿದ್ದ ದೇಶದ್ರೋಹ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಶಾಹೀನ್ ಶಾಲೆಯ ಮುಖ್ಯಸ್ಥರಾದ ಅಲ್ಲಾವುದ್ದೀನ್, ಅಬ್ದುಲ್ ಖಾಲೀಕ್, ಮೊಹಮ್ಮದ್ ಬಿಲಾಲ್ ಇನಾಂದರ್ ಮತ್ತು ಮೊಹಮ್ಮದ್ ಮೆಹ್ತಾಬ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಸಾಮಾಜಿಕ ಕಾರ್ಯಕರ್ತ ನೀಲೇಶ್ ರಕ್ಷ್ಯಾಲ್ ಎಂಬವರು ದಾಖಲಿಸಿದ್ದ ದೂರಿನ ಮೇರೆಗೆ ಬೀದರ್ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಶಾಹೀನ್ ಶಾಲೆಯ ಆಡಳಿತ ಮಂಡಳಿಯ ನಾಲ್ವರು ಆರೋಪಿಗಳ ವಿರುದ್ಧ ದೇಶದ್ರೋಹದ ಆರೋಪದ ಅಡಿ ಪ್ರಕರಣ ದಾಖಲಿಸಲಾಗಿತ್ತು.