ಹುಬ್ಬಳ್ಳಿ: ನಿರ್ಮಾಣ ಹಂತದ ಗೋಡೆ ಕುಸಿದು ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಿರೇಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.
ವಿಶೃತ್ ಬೆಳಗಲಿ (9) ಮೃತ ವಿದ್ಯಾರ್ಥಿಯಾಗಿದ್ದು, ಪ್ರಭು ನಾಗಾವಿ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ವಿಶೃತ್ ನಿರ್ಮಾಣ ಹಂತದ ಕಟ್ಟಡದ ಕೆಳಭಾಗ ಆಟವಾಡುತ್ತಿದ್ದ. ಆಟವಾಡುವ ಸಂದರ್ಭದಲ್ಲಿ ಏಕಾಏಕಿ ನಿರ್ಮಾಣ ಹಂತದ ಗೋಡೆ ಕುಸಿದು ಬಿದ್ದಿದೆ. ಘಟನೆಗೆ ಕಳಪೆ ಕಾಮಗಾರಿ ಕಾರಣ ಎನ್ನಲಾಗುತ್ತಿದೆ. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಶೌಚಾಲಯದ ಗೋಡೆ ಕುಸಿದು ಬಾಲಕ ಸಾವು: ಮಾರ್ಚ್ನಲ್ಲಿ (2023) ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಸರ್ಕಾರ ನಿರ್ಮಿಸಿದ್ದ ಶೌಚಾಲಯದ ಮೇಲ್ಛಾವಣಿ ಮತ್ತು ಕಟ್ಟಡ ಕುಸಿದು 5 ವರ್ಷದ ಬಾಲಕ ಸಾವನ್ನಪ್ಪಿದ್ದ. 2016 ರಲ್ಲಿ ಈ ಕಟ್ಟಡವನ್ನು ಮೃತ ಬಾಲಕನ ಮನೆ ಮುಂದೆ ಕಟ್ಟಲಾಗಿತ್ತು. ಮೃತ ಬಾಲಕ ತನ್ನ ಗೆಳೆಯರೊಂದಿಗೆ ಅದೇ ಶೌಚಾಲಯದ ಬಳಿ ಆಟವಾಡುತ್ತಿದ್ದ. ಈ ವೇಳೆ ಏಕಾಏಕಿ ಶೌಚಾಲಯದ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿದ್ದ.