ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ ಹೊಸ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ.
2023-24 ಸಾಲಿನ ಹೊಸ ಬಜೆಟ್ಗೆ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ಜಾರಿ ಮಾಡಿರುವ ಸಿದ್ದರಾಮಯ್ಯ ಈ ಬಾರಿ ಬಜೆಟ್ನಲ್ಲಿ ಹೆಚ್ಚಿನ ಗ್ಯಾರಂಟಿ ಆದಾಯ ಸಂಗ್ರಹಿಸುವತ್ತ ಚಿತ್ತ ನೆಟ್ಟಿದ್ದಾರೆ. ಅಷ್ಟಕ್ಕೂ ಕಳೆದ ಎರಡು ತಿಂಗಳಲ್ಲಿ ರಾಜ್ಯ ಬೊಕ್ಕಸ ಸೇರಿರುವ ಸ್ವಂತ ತೆರಿಗೆ ಏನಿದೆ ಎಂಬ ವರದಿ ಇಲ್ಲಿದೆ.
ಬಿಜೆಪಿಯನ್ನು ಸೋಲಿಸಿ ಭರ್ಜರಿ ಜಯದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ಆರಂಭಿಸಿದ್ದು, ಇದೀಗ ಹೊಸ ಬಜೆಟ್ ಮಂಡನೆಗೆ ತಯಾರಿ ನಡೆಸಲಾಗುತ್ತಿದೆ. ಜುಲೈ 7ರಂದು ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡಿಸಲಿದ್ದಾರೆ. ನಿರ್ಗಮಿತ ಬಿಜೆಪಿ ಸರ್ಕಾರ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿತ್ತು. ಆದರೆ, ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬಂದು ಸರ್ಕಾರ ರಚನೆ ಮಾಡಿದ್ದು, ಇದೀಗ ಕಾಂಗ್ರೆಸ್ ಸರ್ಕಾರ ಪೂರ್ಣ ಪ್ರಮಾಣದ ಹೊಸ ಬಜೆಟ್ ಮಂಡಿಸಲಿದೆ.
ಈಗಾಗಲೇ ಪೂರ್ವತಯಾರಿ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯರಿಗೆ ಹೊಸ ಬಜೆಟ್ನಲ್ಲಿನ ಸವಾಲು ಪಂಚ ಗ್ಯಾರಂಟಿಗಳಿಗೆ ಹಣ ಸಂಗ್ರಹ. ಪಂಚ ಗ್ಯಾರಂಟಿಗಳಿಗೆ ಸುಮಾರು 60,000 ಕೋಟಿ ರೂ. ಹಣ ಬೇಕಾಗಿದೆ. ಇಷ್ಟು ದೊಡ್ಡ ಪ್ರಮಾಣದ ಹಣ ಸಂಗ್ರಹದ ಬೃಹತ್ ಸವಾಲು ಸಿಎಂ ಸಿದ್ದರಾಮಯ್ಯ ಅವರ ಮುಂದೆ ಇದೆ. ಹಾಗಾಗಿ ಈ ಬಜೆಟ್ನಲ್ಲಿ ಪಂಚ ಗ್ಯಾರಂಟಿಗಳಿಗೆ ಆದಾಯ ಸಂಗ್ರಹಿಸುವುದೇ ಪ್ರಮುಖಾಂಶವಾಗಿರಲಿದೆ. ಅದಕ್ಕಾಗಿನೇ ತೆರಿಗೆ ಸಂಗ್ರಹವನ್ನು ಹೆಚ್ಚಿಸುವ ಟಾರ್ಗೆಟ್ನ್ನು ಅಧಿಕಾರಿಗಳಿಗೆ ನೀಡಿದೆ. ಸೋಮವಾರ ಸಿಎಂ ಸಿದ್ದರಾಮಯ್ಯ ತೆರಿಗೆ ಸಂಗ್ರಹಣಾ ಇಲಾಖೆಗಳ ಜೊತೆ ಸಭೆ ನಡೆಸಿ ಆದಾಯ ಸಂಗ್ರಹವನ್ನು ವೃದ್ಧಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಸುಮಾರು 50,000 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹದ ಗುರಿಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ ಎನ್ನಲಾಗಿದೆ.