Breaking News
Home / ರಾಜಕೀಯ / ನೀರು ಸರಬರಾಜಿನಲ್ಲಿ ಸಮಸ್ಯೆ ಎದುರಾಗದಂತೆ ತಾಲ್ಲೂಕು ಪ್ರವಾಸ ಕೈಗೊಳ್ಳಿ: ಜಿ.ಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಸೂಚನೆ

ನೀರು ಸರಬರಾಜಿನಲ್ಲಿ ಸಮಸ್ಯೆ ಎದುರಾಗದಂತೆ ತಾಲ್ಲೂಕು ಪ್ರವಾಸ ಕೈಗೊಳ್ಳಿ: ಜಿ.ಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಸೂಚನೆ

Spread the love

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗಗಳ ಕೆಲವು ಸ್ಥಳಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು, ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಕ್ಷಣವೇ ತಾಲ್ಲೂಕು ಪ್ರವಾಸ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆಗಳ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶಿಸಿದರು.

ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.

ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ನೀರಿನ ಸಮಸ್ಯೆ ಸಂಬಂಧ ಸಚಿವರು ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಭೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. 16 ಜಿಲ್ಲೆಗಳಲ್ಲಿ ನೀರಿನ ಕೊರತೆಯುಂಟಾಗಿದ್ದು, ಇವುಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ನೀರಿನ ತೀವ್ರ ಕೊರತೆ ಎದುರಾಗಿದೆ ಎಂಬ ವಿಷಯವನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಸಚಿವರ ಗಮನಕ್ಕೆ ತಂದರು. ರಾಜ್ಯದ 4 ಜಿಲ್ಲೆಗಳಲ್ಲಿ ಪರಿಸ್ಥಿತಿ ಸುಧಾರಣೆ ಹಂತದಲ್ಲಿದೆ ಎಂದರು. ಅಂತರ್ಜಲ ಕುಸಿತದಿಂದ ಬಳಲುತ್ತಿರುವ ಜಿಲ್ಲೆಗಳನ್ನು ಆದ್ಯತೆಯಾಗಿ ಪರಿಗಣಿಸಿ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಲು ಸಚಿವರು ಇದೇ ವೇಳೆ ನಿರ್ದೇಶಿಸಿದರು.

ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಾರ್ವಜನಿಕರು ನೀಡುವ ದೂರುಗಳ ಪರಿಹಾರಕ್ಕೆ ಆದ್ಯತೆ ನೀಡಬೇಕೆಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ ಅವರು, ತಾಲ್ಲೂಕು ಅಧಿಕಾರಿಗಳನ್ನು ದೂರು ನಿರ್ವಹಣೆ ಕಾರ್ಯಕ್ಕೆ ಸಜ್ಜುಗೊಳಿಸಲು ಹೇಳಿದರು. ನೀರಿನ ಅಭಾವ, ಕಲುಷಿತ ನೀರು ಸರಬರಾಜು ಕುರಿತಂತೆ ಬರುವ ದೂರುಗಳಿಗೆ ಅಧಿಕಾರಿಗಳು ಪ್ರಥಮ ಆದ್ಯತೆ ನೀಡಿ ತಕ್ಷಣದ ಕ್ರಮ ಕೈಗೊಳ್ಳಲು ಸಲಹೆ ಕೊಟ್ಟರು.

ರಾಜ್ಯದ ಪ್ರಸ್ತುತ ಹವಾಮಾನ ಹಾಗೂ ಮಳೆಯ ಪ್ರಮಾಣ ಕುರಿತೂ ಸಚಿವರು ಮಾಹಿತಿ ಪಡೆದರು. ಕಳೆದ 50 ವರ್ಷಗಳಲ್ಲೇ ಅತೀ ಹೆಚ್ಚು ಮಳೆ ಕೊರತೆ ಈ ವರ್ಷ ನಮ್ಮನ್ನು ಕಾಡುತ್ತಿದೆ. ಆದರೂ ಕಳೆದ ಒಂದು ವಾರದಿಂದ ಬಹುಪಾಲು ಎಲ್ಲ ಜಿಲ್ಲೆಗಳಲ್ಲೂ ಮಳೆ ಸುರಿಯುತ್ತಿದ್ದು, ದಿನೇ ದಿನೇ ಪರಿಸ್ಥಿತಿ ಸುಧಾರಣೆಯಾಗುತ್ತಿದೆ ಎಂಬ ಅಂಶವನ್ನು ಅಧಿಕಾರಿಗಳು ತಿಳಿಸಿದರು. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವಲ್ಲಿ ಜಿಲ್ಲಾ ಪಂಚಾಯತಿಗಳಿಗೆ ಹಣಕಾಸು ತೊಂದರೆ ಎದುರಾದಲ್ಲಿ ಅವಶ್ಯವಿರುವ ಹೆಚ್ಚುವರಿ ಅನುದಾನಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಸಚಿವರು ಹೇಳಿದರು.

31 ಜಿಲ್ಲೆಗಳಲ್ಲಿ, 24 ಜಿಲ್ಲೆಗಳ 424 ಗ್ರಾಮಗಳಿಗೆ 365 ಟ್ಯಾಂಕರ್‌ಗಳ ಮೂಲಕ 969 ಟ್ರಿಪ್‌ ನೀರು ಸರಬರಾಜು ಮಾಡಲಾಗುತ್ತಿದೆ. ಇದರೊಂದಿಗೆ 431 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು, 357 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್‌ ರಾಜ್)‌ ಉಮಾ ಮಹದೇವನ್‌, ಕರ್ನಾಟಕ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ಗಂಗಾಧರಸ್ವಾಮಿ, ಮುಖ್ಯ ಅಭಿಯಂತರ ಎಜಾಜ್‌ ಹುಸೇನ್‌ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ