ಹಾಸನ: ”ಚುನಾವಣೆಗೂ ಮುನ್ನ ನಾವು ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ 60 ಸಾವಿರ ಕೋಟಿ ಆರ್ಥಿಕ ಹೊರೆಯ ಭಾರವಾದ್ರೂ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯ ಸರ್ಕಾರದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಬೂವನಹಳ್ಳಿ ಹೆಲಿಪ್ಯಾಡ್ನಲ್ಲಿ ಅವರು ಮಾತನಾಡಿದರು.
ಅನ್ನಭಾಗ್ಯ ಯೋಜನೆ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸಕಾಲದಲ್ಲಿ ಅನುಷ್ಠಾನ ಆಗದೇ ಇದ್ದರೆ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ”ಅಕ್ಕಿ ವಿಚಾರದಲ್ಲಿ ರಾಜಕೀಯ ಗಿಮಿಕ್ ಮಾಡಬಾರದು. ಬೀದಿಗಿಳಿದು ಹೋರಾಟ ಮಾಡುವ ಬದಲು ಕೇಂದ್ರ ಸರ್ಕಾರಕ್ಕೆ ಹೇಳಿ ಅಕ್ಕಿ ಕೊಡಿಸಲಿ” ಎಂದು ಬಿಜೆಪಿ ನಾಯಕರ ನಡೆ ವಿರುದ್ಧ ಕಿಡಿಕಾರಿದರು.
”ಬಿಜೆಪಿಯವರು ಹೇಳಿದ್ದನ್ನೆಲ್ಲ ಮಾಡಿದ್ದಾರಾ, ನಮ್ಮ ವಿರುದ್ಧ ಪ್ರತಿಭಟನೆ ಮಾಡಲು ಅವರಿಗೆ ಯಾವ ನೈತಿಕತೆ ಇದೆ. ನಾವು ಪ್ರಾಮಾಣಿಕ ಪ್ರಯತ್ನ ಮಾಡ್ತಿದ್ದೇವೆ. ಅವರ ಪ್ರಣಾಳಿಕೆಯಲ್ಲಿ ಹೇಳಿದ್ದನ್ನು ಒಂದನಾದ್ರೂ ಈಡೇರಿಸಿದ್ದಾರಾ? 2018ರಲ್ಲಿ ಅವರ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಎಷ್ಟು ಜಾರಿಗೆ ತಂದಿದ್ದಾರೆ. ಯಡಿಯೂರಪ್ಪ ನಂತರ ಬೊಮ್ಮಾಯಿ ಅವಧಿಯಲ್ಲಿ ಎಷ್ಟು ಇಂಪ್ಲಿಮೆಂಟ್ ಮಾಡಿದ್ದಾರೆ ಹೇಳಲಿ” ಎಂದು ಸವಾಲು ಹಾಕಿದರು. ”ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಂತಹ ಎಲ್ಲಾ ವ್ಯವಹಾರಗಳನ್ನು ತನಿಖೆ ಮಾಡುತ್ತೇವೆ” ಎಂದರು.