ಬೆಂಗಳೂರು: ಕಳೆದ ಆರು ವರ್ಷದ ಹಿಂದೆ ಗೋವಿನ ಹತ್ಯೆ ಮಾಡುವವರ ಕೈ ಕಡಿಯುವಂತೆ ಕರೆ ನೀಡಿದ್ದ ಆರೋಪದಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧದ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಈ ಸಂಬಂಧ ವಿಜಯಪುರ ಜಿಲ್ಲೆ ಬಬಲೇಶ್ವರ ಪೊಲೀಸ್ ಠಾಣೆಯ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಪ್ರಮೋದ್ ಮುತಾಲಿಕ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ಕಲಬುರಗಿ ನ್ಯಾಯಪೀಠ ಪ್ರಕರಣ ರದ್ದು ಪಡಿಸಿ ಆದೇಶಿಸಿದೆ.
ಭಾರತೀಯ ದಂಡ ಸಂಹಿತೆ (ಐಪಿಸಿ)ಸೆಕ್ಷನ್ 295(ಎ) ಅಡಿ ಪ್ರಕರಣ ದಾಖಲಿಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಿದೆ. ಅದು ಇಲ್ಲದಿದ್ದರೆ, ಪ್ರಕರಣವನ್ನು ಪರಿಗಣಿಸಲೇಬಾರದು. ಆದರೆ, ಈ ಪ್ರಕರಣದಲ್ಲಿ ಯಾವುದೇ ರೀತಿಯ ಪೂರ್ವಾನುಮತಿ ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಮಾಡುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಜೊತೆಗೆ, ಆರೋಪ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸರ್ಕಾರದ ಅನುಮೋದನೆ ಇಲ್ಲದೆ ದೂರನ್ನು ಮಾನ್ಯ ಮಾಡಿದೆ. ನಿಯಮದಲ್ಲಿ ಅದಕ್ಕೆ ಅವಕಾಶವಿಲ್ಲ. ಹಾಗಾಗಿ ಪ್ರಕರಣ ಕಾನೂನಿನಡಿ ಊರ್ಜಿತವಾಗುವುದಿಲ್ಲ ಎಂದು ಪೀಠ ತಿಳಿಸಿದೆ. ಅಲ್ಲದೆ, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಯಾವುದೇ ಸತ್ಯಾಂಶಗಳಿಲ್ಲ. ಆರೋಪ ಸಾಬೀತುಪಡಿಸುವ ಅಂಶಗಳಿಲ್ಲ. ಪೊಲೀಸ್ ಸಿಬ್ಬಂದಿಯ ಹೇಳಿಕೆಗಳನ್ನು ಬಿಟ್ಟರೆ ಬೇರೆ ಯಾವುದೇ ಸಾಕ್ಷ್ಯವನ್ನು ಒದಗಿಸಿಲ್ಲ. ಸ್ವತಂತ್ರ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳಿಲ್ಲ. ಆರೋಪಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನಲಾದ ವಿಡಿಯೋ ಕೂಡ ಇಲ್ಲ. ಹಾಗಾಗಿ ಆರೋಪಗಳನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.