ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ.
ಹೈಕಮಾಂಡ್ ವೀಕ್ಷಕರು ಇನ್ನು ಆಗಮಿಸದೇ ಇರುವ ಕಾರಣದಿಂದಾಗಿ ನಾಳೆಗೆ ಶಾಸಕಾಂಗ ಸಭೆ ಮುಂದೂಡಿಕೆಯಾಗಿದ್ದು, ನಾಳೆಯ ಕಲಾಪ ಅಧಿಕೃತ ಪ್ರತಿಪಕ್ಷದ ನಾಯಕನಿಲ್ಲದೇ ನಡೆಯಲಿದೆ. ಆದರೆ ಗ್ಯಾರಂಟಿ ವಿಚಾರದಲ್ಲಿನ ಬಿಜೆಪಿ ಹೋರಾಟ ಮಾತ್ರ ಮುಂದುವರೆಯಲಿದೆ. ಉಭಯ ಸದನದಲ್ಲಿ ಬಿಜೆಪಿ ಸದಸ್ಯರು ಹೋರಾಟ ನಡೆಸಿದರೆ ಫ್ರೀಡಂ ಪಾರ್ಕ್ ನಲ್ಲಿ ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ಇಂದು ಸಂಜೆ 6 ಗಂಟೆಗೆ ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹಾಗೂ ವಿನೋದ್ ತಾವ್ಡೆ ಹೈಕಮಾಂಡ್ ಪ್ರತಿನಿಧಿಗಳಾಗಿ ಶಾಸಕಾಂಗ ಸಭೆಗೆ ವೀಕ್ಷಕರಾಗಿ ಭಾಗವಹಿಸಬೇಕಿದ್ದು, ಅವರಿಬ್ಬರು ಇನ್ನು ಆಗಮಿಸದೇ ಇರುವ ಕಾರಣದಿಂದಾಗಿ ಶಾಸಕಾಂಗ ಪಕ್ಷದ ಸಭೆಯನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ನಾಳೆ ಬೆಳಗ್ಗೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ನಾಳೆ ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಸಿ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ.
ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ದೆಹಲಿಯಿಂದ ವಾಪಸಾದ ಬಳಿಕ ಮಾತನಾಡಿದ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ, ಹೈಕಮಾಂಡ್ ನಿಂದ ಇಬ್ಬರು ವೀಕ್ಷಕರು ಆಗಮಿಸಲಿದ್ದು, ಇವತ್ತು ಎಲ್ಲ ಶಾಸಕರ ಜೊತೆ ಚರ್ಚೆ ಮಾಡಿ ನೂತನ ರಾಜ್ಯಾಧ್ಯಕ್ಷರು ಹಾಗೂ ಪ್ರತಿಪಕ್ಷ ನಾಯಕರ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಅಂತಿಮವಾಗಿ ಇವತ್ತು ತಡ ರಾತ್ರಿ ಅಥವಾ ನಾಳೆ ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ತೀರ್ಮಾನ ಮಾಡುತ್ತಾರೆ ಎಂದರು.