ಬೆಳಗಾವಿ: ರಾಜ್ಯದೆಲ್ಲೆಡೆ ಟೊಮೆಟೊ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಬೆಳಗಾವಿ ಜಿಲ್ಲೆಯಲ್ಲೂ ಟೊಮೆಟೊ ಮತ್ತು ಮೆಣಸಿನಕಾಯಿ ಬೆಲೆ ನೂರರ ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿದೆ.
ಒಂದೆಡೆ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ಮಳೆರಾಯನ ಆಗಮನಕ್ಕಾಗಿ ರೈತರು ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ. ಮತ್ತೊಂದೆಡೆ ಟೊಮೆಟೋ, ಮೆಣಸಿನಕಾಯಿ ಬೆಲೆ ಏರಿಕೆಯಾಗಿರುವುದು ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ. ಜುಲೈ ತಿಂಗಳ ಮೊದಲ ವಾರ ಮುಗಿಯುತ್ತ ಬಂದರೂ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಯಾವುದೇ ಪ್ರಯೋಜನವಾಗಿಲ್ಲ. ಮಳೆ ಕೊರತೆ ಹಿನ್ನೆಲೆ ಬಹುತೇಕ ರೈತರು ಬಿತ್ತನೆ ಮಾಡದೇ ಕೈಕಟ್ಟಿ ಕುಳಿತುಕೊಳ್ಳುವಂತಾಗಿದೆ.
ಇದಕ್ಕೂ ಮೊದಲು ಬೆಳೆದಿದ್ದ ಟೊಮೆಟೋ, ಮೆಣಸಿನಕಾಯಿ ಸೇರಿ ಇತರೆ ತರಕಾರಿ ಬೆಳೆಗಳು ಸಮರ್ಪಕ ಮಳೆಯಾಗದೇ ಇರುವುದರಿಂದ ಇಳುವರಿ ಕಡಿಮೆಯಾಗಿದೆ. ಪರಿಣಾಮ ಟೊಮೆಟೋ ಮತ್ತು ಹಸಿ ಮೆಣಸಿನಕಾಯಿ ಬೆಲೆ ಏರಿಕೆಯಾಗಿದೆ. ಟೊಮೆಟೊ ಹಾಗೂ ಮೆಣಸಿನಕಾಯಿ ಪ್ರತಿ ಕೆಜಿಗೆ ನೂರು ರೂಪಾಯಿಯಂತೆ ಮಾರಾಟವಾಗುತ್ತಿದೆ. ಟೊಮೆಟೋ ಮತ್ತು ಮೆಣಸಿನಕಾಯಿ ಅಗತ್ಯಕ್ಕಿಂತ ಕಡಿಮೆ ಉತ್ಪನ್ನ ಮಾರುಕಟ್ಟೆಗೆ ಬಂದಿರುವುದರಿಂದ ಬೆಲೆ ಏರಿಕೆ ಉಂಟಾಗಿದೆ.