ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿನ ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿತು. ಆಡಳಿತ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸದಸ್ಯರ ನಡುವೆ ಏರು ಧ್ವನಿಯಲ್ಲಿ ಮಾತಿನ ಚಕಮಕಿ ನಡೆದು ಇಡೀ ಸದನ ರಣರಂಗದಂತೆ ನಿರ್ಮಾಣವಾದ ಪ್ರಸಂಗ ನಡೆಯಿತು.
ಅಲ್ಲದೇ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಲ್ಲಿಯವರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯ ಸ್ವಾಮಿ ರಾಜೀನಾಮೆ ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ನಡೆಸಿದ್ದರಿಂದ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದ ಘಟನೆಯೂ ಜರುಗಿತು.
ಕೆಎಸ್ ಆರ್ ಟಿಸಿ ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣ: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಪರಸ್ಪರ ವಾದ, ವಾಗ್ವಾದ, ಆರೋಪ – ಪ್ರತ್ಯಾರೋಪ ಮಾಡಿದ್ದಲ್ಲದೇ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿದ್ದರಿಂದ ಸದನದಲ್ಲಿ ಕೋಲಾಹಲದ ವಾತಾವರಣ ನಿರ್ಮಾಣವಾಗಿತ್ತು.
ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಗಮಂಗದಲ್ಲಿ ಕೆಎಸ್ಆರ್ಟಿಸಿಯ ಚಾಲಕ ಕಂ ನಿರ್ವಾಹಕ ಜಗದೀಶ್ ಅವರಿಗೆ ಮಾನಸಿಕ ಕಿರುಕುಳ ನೀಡಿ ವರ್ಗಾವಣೆ ಮಾಡಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಸ್ತುತ ಮೈಸೂರಿನ ಆಸ್ಪತ್ರೆಯೊಂದರಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆತ್ಮಹತ್ಯೆ ಯತ್ನಕ್ಕೂ ಮುನ್ನ ತನ್ನ ಈ ಸ್ಥಿತಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ. ಈ ಬಗ್ಗೆ ಇದುವರೆಗೂ ಎಫ್ ಐಆರ್ ಹಾಕಿಲ್ಲ. ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತನಿಖೆ ಮುಗಿಯುವವರೆಗೂ ಚಲುವರಾಯಸ್ವಾಮಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.