ಚಿಕ್ಕೋಡಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿದ ಧಾರಾಕಾರ ಮಳೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ಕೆಳ ಹಂತದ ಸೇತುವೆಗಳು ಜಲಾವೃತವಾಗಿವೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ ಕೃಷ್ಣಾನದಿಗೆ 49,500 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ, ಮೈದುಂಬಿ ಹರಿಯುತ್ತಿದೆ.
ಮತ್ತೊಂದು ಕಡೆ ವೇದಗಂಗಾ ನದಿಯಲ್ಲಿ ಒಳಹರಿವು ನೀರಿನ ಮಟ್ಟ ಹೆಚ್ಚಳವಾದ ಪರಿಣಾಮವಾಗಿ ನಿಪ್ಪಾಣಿ ತಾಲೂಕಿನ ಜತ್ರಾಟ- ಭೀವಶಿ ಸೇತುವೆ ಮುಳುಗಡೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಪ್ಪಾಣಿ ಪೊಲೀಸರು ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರವನ್ನು ಬಂದ್ ಮಾಡಿದ್ದಾರೆ. ಇನ್ನೊಂದೆಡೆ ಕಾಗವಾಡ ಮಾರ್ಗವಾಗಿ ರಾಜಾಪುರದಿಂದ ಮಂಗಾವತಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಿಂದ ರಸ್ತೆ ಜಲಾವೃತವಾಗಿದೆ. ಆ ಮಾರ್ಗವನ್ನು ಪೊಲೀಸರು ಬಂದ್ ಮಾಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಜಿಲ್ಲೆಯಾದ್ಯಂತ ಈಗಾಗಲೇ 83 ಸೇತುವೆಗಳ ಮೇಲೆ ಜಿಲ್ಲಾ ಪೊಲೀಸರು ನಿಗಾ ವಹಿಸಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹುಕ್ಕೇರಿ ತಾಲೂಕಿನಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಹುಕ್ಕೇರಿ ಪಟ್ಟಣದಲ್ಲಿ ನಿಲ್ಲಿಸಿದ ಕಾರ್ವೊಂದರ ಮೇಲೆ ಮರವೊಂದು ಬಿದ್ದಿರುವ ಘಟನೆ ಸಂಭವಿಸಿದೆ. ವಿನಯಕುಮಾರ ರಜಪೂತ ಎಂಬುವರಿಗೆ ಸೇರಿದ್ದ ಕಾರು ಇದಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ತಿಳಿದುಬಂದಿದೆ.