ಬೆಂಗಳೂರು: ಬಿಜೆಪಿ ಸರ್ಕಾರವಧಿಯಲ್ಲಿ ನೇದ ಮತ್ತೊಂದು ಅಕ್ರಮವನ್ನು ಕಾಂಗ್ರೆಸ್ ಸರ್ಕಾರ ತನಿಖೆಗೆ ಒಪ್ಪಿಸಿದೆ. ಬಹುಚರ್ಚಿತ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮವನ್ನು ನ್ಯಾಯಾಂಗ ತನಿಖೆಗೆ ನೀಡಿ ಸರ್ಕಾರ ಆದೇಶಿಸಿದೆ.
ಕಳೆದ ಬಿಜೆಪಿ ಸರ್ಕಾರದಲ್ಲಿ ಸದ್ದು ಮಾಡಿದ್ದ 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು 3 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.
ಕಳೆದ ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಭಾರೀ ಸದ್ದು ಮಾಡಿತ್ತು. ಕಾಂಗ್ರೆಸ್ ಇದೇ ವಿಚಾರವಾಗಿ ಬಿಜೆಪಿ ಸರ್ಕಾರ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹೋರಾಟವನ್ನೇ ನಡೆಸಿದ್ದರು. ಈ ಅಕ್ರಮವನ್ನು ತನಿಖೆ ನಡೆಸುವುದಾಗಿ ಕಾಂಗ್ರೆಸ್ ಹೇಳುತ್ತಿತ್ತು. ಇದೀಗ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಕ್ರಮವನ್ನು ಹೈ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ.
ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಜ. 21, 2021ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅ. 3, 2021 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ಒಳಪಡಿಸಿತ್ತು. ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.
ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರಿಸಲಾಗಿದೆ. ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆಯನ್ನು ಬರೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ 1977ರ ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳಲ್ಲಿ ನಿಯಮ 20 ರಲ್ಲಿ ನಮೂದಿಸಿರುವ ದುರ್ನಡತೆಯನ್ನು ಎಸಗಿರುವ ಕಾರಣ ನೇಮಕಾತಿ ಡಿಜಿಪಿಯನ್ನು ಜೂ. 20, 2023ರಲ್ಲಿ ಪೊಲೀಸ್ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿತ್ತು