Breaking News

ಟೊಮೆಟೋ ತುಂಬಿದ್ದ ಗೂಡ್ಸ್ ವಾಹನ‌ ಕದ್ದೊಯ್ದಿದ್ದ ದಂಪತಿ ಬಂಧನ

Spread the love

ಬೆಂಗಳೂರು : ಮಾರುಕಟ್ಟೆಯಲ್ಲಿ ದರ ಗಗನಕ್ಕೇರಿರುವ ಸಂದರ್ಭದಲ್ಲಿ ಟೊಮೆಟೋ ತುಂಬಿದ್ದ ಗೂಡ್ಸ್ ವಾಹನವನ್ನೇ ಕಳ್ಳತನ ಮಾಡಿದ್ದ ದಂಪತಿಯನ್ನು ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಭಾಸ್ಕರ್ ಹಾಗೂ ಆತನ ಪತ್ನಿ ಸಿಂಧುಜಾ ಎಂದು ಗುರುತಿಸಲಾಗಿದೆ. ರಾಕಿ, ಕುಮಾರ್, ಮಹೇಶ್ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಘಟನೆ ಹಿನ್ನೆಲೆ : ಜುಲೈ 8ರಂದು ಹಿರಿಯೂರಿನ ರೈತನೋರ್ವ ತನ್ನ ಜಮೀನಿನಲ್ಲಿ ಬೆಳೆದಿದ್ದ 250ಕ್ಕೂ ಹೆಚ್ಚು ಕೆಜಿಯಷ್ಟು ಟೊಮೆಟೋವನ್ನು ಕೋಲಾರಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ ಆರ್​ಎಂಸಿ ಯಾರ್ಡ್ ಬಳಿ ಕಾರಿನಲ್ಲಿ ಬಂದಿದ್ದ ಆರೋಪಿಗಳು ತಮ್ಮ ಕಾರಿಗೆ ನಿಮ್ಮ ವಾಹನ ಟಚ್ ಆಗಿದೆ ಎಂದು ಬಲವಂತದಿಂದ ಗೂಡ್ಸ್ ವಾಹನ ನಿಲ್ಲಿಸಿ ಚಾಲಕ ಹಾಗೂ ರೈತನ ಮೇಲೆ ಹಲ್ಲೆ ನಡೆಸಿದ್ದರು.

ಬಳಿಕ ಗಾಡಿಯಲ್ಲಿದ್ದ ಟೊಮೆಟೋ ನೋಡಿ ಕಳ್ಳತನದ ಸಂಚು ರೂಪಿಸಿದ್ದರು. ಚಾಲಕ ಹಾಗೂ ರೈತನನ್ನು ಕೂರಿಸಿಕೊಂಡು ಹೋಗಿ ಚಿಕ್ಕಜಾಲ ಬಳಿ ಬಿಟ್ಟು ಟೊಮೆಟೊ ತುಂಬಿದ್ದ ವಾಹನ ಸಮೇತ ಪರಾರಿ ಆಗಿದ್ದರು. ನಂತರ ಚೆನ್ನೈ ಮಾರುಕಟ್ಟೆಯಲ್ಲಿ ಟೊಮೆಟೊ ಮಾರಾಟ ಮಾಡಿದ್ದರು. ಬಳಿಕ ಖಾಲಿ ವಾಹನ ತಂದು ಪೀಣ್ಯ ಬಳಿ ನಿಲ್ಲಿಸಿ, ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಪರಾರಿಯಾಗಿದ್ದರು. ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಈ ಸಂಬಂಧ ತನಿಖೆ ನಡೆಸಿದ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ