ಬೆಂಗಳೂರು: ರಾಜ್ಯದಲ್ಲಿನ ಹವಮಾನ ಮತ್ತು ಮಳೆ, ಬೆಳೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ತಿಂಗಳ 26 ರಂದು ವಿಡಿಯೋ ಸಂವಾದ ನಡೆಸಲಿದ್ದಾರೆ.
ಹೆಚ್ಚಾಗಿ ಮಳೆ ಬೀಳುವ ಪ್ರದೇಶಗಳು ಮತ್ತು ಮಳೆ ಇಲ್ಲದೇ ಬರಗಾಲದ ಪರಿಸ್ಥಿತಿ ಇರುವ ಜಿಲ್ಲೆಗಳೊಂದಿಗೆ ಮುಖ್ಯಮಂತ್ರಿಗಳು ವಿಡಿಯೋ ಸಂವಾದದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಪರಿಹಾರದ ಕ್ರಮಗಳನ್ನು ಕೈಗೊಳ್ಳಲಿದ್ದಾರೆ.
ವಿಡಿಯೋ ಸಂವಾದದಲ್ಲಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗಳು, ಕಂದಾಯ ಸಚಿವರು, ಕೃಷಿ ಸಚಿವರು ಸೇರಿದಂತೆ ಹಿರಿಯ ಸಚಿವರುಗಳು ಭಾಗಿಯಾಗಲಿದ್ದಾರೆ. ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಿಸುವಂತಾಗಿದೆ.
ಕರಾವಳಿಯ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ಸ್ಥಳೀಯ ಜಿಲ್ಲಾಡಳಿತ ರಜೆಯನ್ನ ಸಹ ಘೋಷಣೆ ಮಾಡಿದೆ. ಈ ಎಲ್ಲ ಪರಿಸ್ಥಿತಿಗಳ ಬಗ್ಗೆ ಮುಖ್ಯಮಂತ್ರಿಗಳು ವಿಡಿಯೋ ಸಂವಾದದಲ್ಲಿ ಅವಲೋಕನ ಮಾಡಲಿದ್ದಾರೆ.