ಬೆಂಗಳೂರು : ಬಹುಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಆದೇಶ ನೀಡಿದೆ.
ಇದರಿಂದಾಗಿ ಬಹುಕೋಟಿ ಹಗರಣದಲ್ಲಿ ಸಿಲುಕಿದ್ದ ಹಿಲೋರಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ತನ್ನ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಅಜಯ್ ಹಿಲೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತಿರ್ಪುನ್ನು ಕಾಯ್ದಿರಿಸಿದ್ದು, ಶುಕ್ರವಾರ ಪ್ರಕಟಿಸಿತು. ಅರ್ಜಿದಾರರನ್ನು ಈಗಾಗಲೇ ಇಲಾಖಾ ವಿಚಾರಣೆಯಲ್ಲಿ ದೋಷಮುಕ್ತಗೊಳಿಸಲಾಗಿದೆ. ಆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಪ್ರಕರಣ ರದ್ದು ಗೊಳಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ, ವಿವರವಾದ ಆದೇಶ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಅರ್ಜಿದಾರರು 2020ರ ಸೆ.9ರಂದು ತಮ್ಮ ವಿರುದ್ಧ ವಿಚಾರಣೆಗೆ ಸರ್ಕಾರ ಪೂರ್ವಾನುಮತಿ ನೀಡಿದ್ದನ್ನು ಮತ್ತು 2020ರ ಜ.7ರಂದು ಸಿಬಿಐ ತನಿಖೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಪ್ರಕರಣದ ಹಿನ್ನೆಲೆ ಏನು?: ಪೂರ್ವ ವಿಭಾಗದ ಡಿಸಿಪಿ ಆಗಿದ್ದ ಅಜಯ್ ಹಿಲೋರಿ 2017ರ ಮೇ 16ರಂದು ಐಎಂಎ ಪ್ರಕರಣದ ಸಂಬಂಧ ನಗರ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದರು. ಅದರಲ್ಲಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಡೆಸಿರುವ ತನಿಖೆಯ ವರದಿಯನ್ನು ಆಧರಿಸಿ ಐಎಂಎ ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ಅವರು ಶಿಫಾರಸು ಮಾಡಿದ್ದರು.