ಕಾರವಾರ : ಉತ್ತರ ಕನ್ನಡದಲ್ಲಿ ಆರ್ಭಟಿಸುತ್ತಿದ್ದ ಮಳೆ ಕಡಿಮೆಯಾಗಿದ್ದು, ನದಿ ತೀರಗಳಲ್ಲಿ ಪ್ರವಾಹ ಇಳಿಕೆಯಾಗುತ್ತಿರುವ ಕಾರಣ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ, ಈ ನಡುವೆ ಜಿಲ್ಲೆಯಲ್ಲಿ ನಡೆದ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯಲ್ಲಿ ಜಿಲ್ಲೆಯ 439 ಪ್ರದೇಶಗಳಲ್ಲಿ ಭೂ ಕುಸಿತವಾಗುವ ಬಗ್ಗೆ ಮುನ್ನೆಚ್ಚರಿಕಾ ವರದಿಯೊಂದು ಸರ್ಕಾರಕ್ಕೆ ಸಲ್ಲಿಕೆಯಾಗಿರುವುದು ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಹುಪಾಲು ಅರಣ್ಯ ಪ್ರದೇಶವನ್ನೇ ಹೊಂದಿರುವ ಉತ್ತರಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಆಗುತ್ತದೆ. ಅದರಲ್ಲಿಯೂ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಪ್ರವಾಹ ಸೃಷ್ಟಿಯಾಗುತ್ತಿರುವುದು ಪ್ರತಿ ಮಳೆಗಾಲದ ವೇಳೆ ಜಿಲ್ಲೆಯ ಜನ ಆತಂಕದಲ್ಲಿ ಕಾಲ ಕಳೆಯಬೇಕಾದ ಸ್ಥಿತಿ ಇದೆ. ಇದರ ನಡುವೆ ಇದೀಗ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಜಿಲ್ಲೆಯ 439 ಸ್ಥಳಗಳಲ್ಲಿ ಗುಡ್ಡ ಕುಸಿತವಾಗುವ ಬಗ್ಗೆ ಮುನ್ನೆಚ್ಚರಿಕಾ ಕ್ರಮವಾಗಿ ನೀಡಿದ ವರದಿಯನ್ನು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಇದು ಜಿಲ್ಲೆಯ ಜನರ ಹಾಗೂ ಅಧಿಕಾರಿಗಳ ನಿದ್ದೆಗೆಡಿಸುವಂತೆ ಮಾಡಿದೆ.