ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎ ಪಿ ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಮಂಗಳವಾರ 23ನೇ ಘಟಿಕೋತ್ಸವ ಜರುಗಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿನ್ನದ ಪದಕ ವಿಜೇತರು ಹಾಗೂ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಭಾರತೀಯ ತಂತ್ರಜ್ಞಾನ ಸಂಸ್ಥೆ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರು ಘಟಿಕೋತ್ಸವ ಭಾಷಣ ಮಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸನ್ನು ನನಸು ಮಾಡಿಕೊಳ್ಳಲು ಅವಕಾಶಗಳ ಸದ್ಬಳಕೆ ಮಾಡಿಕೊಳ್ಳಬೇಕು. ಪದವಿಯ ನಂತರ ವಿದ್ಯಾರ್ಥಿಗಳು ತಮಗೆ ಸಿಕ್ಕಿರುವ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ವೃತ್ತಿಪರ ಬೆಳವಣಿಗೆ ಹೊಂದಬೇಕು. ಉದ್ಯೋಗ ಹುಡುಕುವ ಬದಲಿಗೆ ಉದ್ಯೋಗ ಸೃಷ್ಟಿಸುವ ಮೂಲಕ ಭವಿಷ್ಯದಲ್ಲಿ ದೇಶಕ್ಕೆ ನೀವೆಲ್ಲರೂ ಕೊಡುಗೆ ನೀಡುವ ವ್ಯಕ್ತಿಗಳಾಗಬೇಕು.
ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವಿವಿಧ ಮಹತ್ವದ ಸಾಧನೆಗಳನ್ನು ಮಾಡುವುದರ ಮೂಲಕ ವಿಶ್ವದಲ್ಲಿ ತನ್ನದೇಯಾದ ಛಾಪು ಮೂಡಿಸಿದೆ. ಇತರೆ ದೇಶಗಳಿಗಿಂತ ಭಾರತ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯ ರಾಷ್ಟ್ರವಾಗಿದೆ. ಹಾಗಾಗಿ ಸಂಶೋಧನೆ ಮತ್ತು ನಾವಿನ್ಯತೆಗಳೆರಡು ಸಮಾಜದ ಬೆಳವಣಿಗೆಗೆ ಮುಖ್ಯವಾಗಿವೆ. ಆದ್ದರಿಂದ ಸಂಶೋಧನಾ ಮನೋಭಾವ ನಿರಂತರವಾಗಿರಲಿ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ‘ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಈಗಾಗಲೇ ಸಾಕಷ್ಟು ವಿಕಸನ ಹೊಂದಿದೆ. ಸದ್ಯ ದೇಶದ ಆರ್ಥಿಕತೆ ವಿಶ್ವದಲ್ಲಿ 5ನೇ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಆರ್ಥಿಕತೆಯಲ್ಲಿ ದೇಶ 3ನೇ ಸ್ಥಾನಕ್ಕೆ ಏರಲಿದೆ. ಈ ನಿಟ್ಟಿನಲ್ಲಿ ಭವಿಷ್ಯದ ಪ್ರಜೆಗಳ ಪಾಲುದಾರಿಕೆ ಅವಶ್ಯಕವಾಗಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಹೊಂದುವ ಮೂಲಕ ಭವಿಷ್ಯದಲ್ಲಿ ಭಾರತ ವಿಶ್ವಗುರು ಸ್ಥಾನ ಅಲಂಕರಿಸಲಿದೆ. 100 ವರ್ಷಗಳ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯಲ್ಲಿ ಖಚಿತವಾಗಿ ಭಾರತ ವಿಶ್ವಗುರು ಸ್ಥಾನದಲ್ಲಿರಲಿದೆ’ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತಿಯಿದ್ದ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಮಾತನಾಡಿ, ಉದ್ಯೋಗಿಗಳಿಗೆ ಜ್ಞಾನಕ್ಕಿಂತ ಕೌಶಲ ಬಹಳ ಮುಖ್ಯ. ವಿಶ್ವವಿದ್ಯಾಲಯ ಮತ್ತು ಇಂಜಿನಿಯರಿಂಗ್ ಕಾಲೇಜುಗಳು ಪಠ್ಯಕ್ರಮದ ಜೊತೆಗೆ ಕೈಗಾರಿಕೆಗಳ ಜೊತೆಗೆ ಸಂಬಂಧ ಬೆಳೆಸುವಂತೆ ವಾತಾವರಣ ಸೃಷ್ಟಿಸಬೇಕು. ಅದು ಶೈಕ್ಷಣಿಕ ಪಠ್ಯಕ್ರಮದ ಭಾಗವಾಗಬೇಕು. ಇದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಮೂವರಿಗೆ ಗೌರವ ಡಾಕ್ಟರೇಟ್: ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಕಾರ್ಯದರ್ಶಿ ಡಾ. ಎ. ವ್ಹಿ. ಎಸ್. ಮೂರ್ತಿ, ಬೆಂಗಳೂರಿನ ಮೈಸೂರು ಮರ್ಕಂಟೈಲ್ ಕಂಪನಿಯ ಅಧ್ಯಕ್ಷ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರದಾನ ಮಾಡಲಾಯಿತು. ಆದಿಚುಂಚನಗಿರಿಯ ಪೀಠಾಧಿಪತಿ ನಿರ್ಮಲಾನಂದನಾಥ ಶ್ರೀಗಳು ಅನುಪಸ್ಥಿತರಿದ್ದರು.