ಕಲಬುರಗಿ, ಆ.05: ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು.
ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಮ್ಯಾಜಿಕ್ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಬಂದಿದೆ. ಇದೀಗ ಸರ್ಕಾರ ತಾನು ನೀಡಿರುವ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೊಳಿಸುತ್ತಿದೆ. ಇಂದು ಕಲಬುರಗಿಯಲ್ಲಿ 200 ಯುನಿಟ್ ವಿದ್ಯುತ್ ನ್ನು ಉಚಿತವಾಗಿ ನೀಡುವ ಗೃಹ ಜೋತಿ ಯೋಜನೆಗೆ(Gruha Jyothi Scheme) ಅಧಿಕೃತವಾಗಿ ಚಾಲನೆ ಸಿಗಲಿದೆ. ಬೆಳಗ್ಗೆ 11 ಗಂಟೆಗೆ ವೇದಿಕೆ ಮೇಲೆ 10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಎಐಸಿಸಿ ಅಧ್ಯಕ್ಷ ಖರ್ಗೆ(Mallikarjuna Kharge) ಚಾಲನೆ ನೀಡಲಿದ್ದಾರೆ. ಮತ್ತೊಂದೆಡೆ ಇಂದು ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಕಾಂಗ್ರೆಸ್, ತಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ ಪ್ರತಿಯೊಂದು ಕುಟುಂಬಕ್ಕೆ ಇನ್ನೂರು ಯುನಿಟ್ ವಿದ್ಯುತ್ ನ್ನು ಉಚಿತವಾಗಿ ನೀಡೋದಾಗಿ ಹೇಳಿತ್ತು. ಜುಲೈ ಒಂದರಿಂದಲೇ ಯೋಜನೆ ಜಾರಿಯಾಗಿದ್ದು, ಜುಲೈ ತಿಂಗಳ ಬಿಲ್ ಉಚಿತವಾಗಿ ಇರಲಿದೆ. ಇಂದು ಈ ಯೋಜನೆಗೆ ಚಾಲನೆ ಸಿಗಲಿದೆ. ಗೃಹ ಜೋತಿ ಯೋಜನೆ ಚಾಲನೆ ಕಾರ್ಯಕ್ರಮವನ್ನು ಕಲಬುರಗಿ ನಗರದಲ್ಲಿ ಇಂಧನ ಇಲಾಖೆ ಆಯೋಜಿಸಿದೆ. ಉಚಿತ ಬೆಳಕು ಸುಸ್ಥಿರ ಬದುಕು ಅನ್ನೋ ಘೋಷವಾಕ್ಯದೊಂದಿಗೆ ಬೆಳಗ್ಗೆ 11 ಗಂಟೆಗೆ, ನಗರದ ಎನ್ ವಿ ಮೈದಾನದಲ್ಲಿ ಗೃಹ ಜೋತಿ ಯೋಜನೆ ಅಧಿಕೃತವಾಗಿ ಜಾರಿಯಾಗಲಿದೆ. ಇನ್ನು ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.
ಇನ್ನು ಕಾರ್ಯಕ್ರಮದಲ್ಲಿ ಹದಿನೈದು ಸಾವಿರಕ್ಕೂ ಹೆಚ್ಚು ಜನ ಕೂತು ಕಾರ್ಯಕ್ರಮ ವೀಕ್ಷಿಸಲು ಅನಕೂಲವಾಗುವಂತೆ ಬೃಹತ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಕುಳಿತುಕೊಳ್ಳಲು ಆಸನ ವ್ಯವಸ್ಥೆಯನ್ನು ಕೂಡಾ ಕಲ್ಪಿಸಲಾಗಿದೆ. ಇನ್ನು ಇಂದಿನ ಕಾರ್ಯಕ್ರಮ ಯಶಸ್ವಿಗೊಳಿಸಲು, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಎಲ್ಲಾ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯಬೇಕು ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.