ಬಳ್ಳಾರಿ: ನಗರದ ಕೆಎಎಸ್ಆರ್ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ಪೆಕ್ಟರ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಹುಸೇನಪ್ಪ (54) ಕೊಲೆಯಾದ ಸೆಕ್ಯುರಿಟಿ ಇನ್ಸ್ಪೆಕ್ಟರ್. ದುಷ್ಕರ್ಮಿಗಳು ಬೈಕ್ನಲ್ಲಿ ಬಂದು ಮಾರಕಾಸ್ತ್ರಗಳಿಂದ ಹುಸೇನಪ್ಪ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದಾರೆ.
ಹುಸೇನಪ್ಪ ಕೆಎಸ್ಆರ್ಟಿಸಿನಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ನಾಳೆ ಬೀದರ್ನಲ್ಲಿ ಚಾಲಕರ ನೇಮಕಾತಿ ಪರೀಕ್ಷೆಗೆ ತೆರಳುತ್ತಿದ್ದ ಅವರು ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಕೆಎಸ್ಆರ್ಟಿಸಿ ಡಿಸಿ ದೇವರಾಜ್, ಗಾಂಧಿ ನಗರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ರೌಡಿ ಶೀಟರ್ ಮಹೇಶ್ ಹತ್ಯೆ( ಬೆಂಗಳೂರು): ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ಜೈಲು ಸೇರಿದ್ದ ರೌಡಿ ಶೀಟರ್ ಮಹೇಶ್ ಎನ್ನುವಾತ ಆಗಸ್ಟ್ 4 ರಂದು ಕಾರಾಗೃಹದಿಂದ ಬಿಡುಗಡೆಯಾಗಿ ಬೆಂಗಳೂರಿನ ಹೊಸ ರೋಡ್ ಜಂಕ್ಷನ್ ಬಳಿ ಕಾರಿನಲ್ಲಿ ತೆರುಳುತ್ತಿದ್ದ. ಈ ವೇಳೆ, ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಮಹೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ನಡೆಸಿದ್ದರು. ಈ ಮೃತ ಮಹೇಶ್ ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ವಿರೋಧಿ ಗ್ಯಾಂಗ್ನಲ್ಲಿ ಲೀಡರ್ ಆಗಿದ್ದ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಪ್ರಾಥಮಿಕ ತನಿಖೆಯಲ್ಲಿ ಹಳೇ ವೈಷಮ್ಯಕ್ಕೆ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕುರಿತು ನಗರ ಆಗ್ನೇಯ ವಿಭಾಗದ ಪೊಲೀಸರು, ಹಂತಕರ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆಗೆ ಇಳಿದಿದ್ದಾರೆ.