ಬೆಂಗಳೂರು : ರಾಜ್ಯದಲ್ಲಿ ಜನವಸತಿ ಇರುವ ಎಲ್ಲ ಗ್ರಾಮಗಳಿಗೆ ಗೌರವಯುತ ಮತ್ತು ಸಾಂಪ್ರದಾಯಿಕವಾಗಿ ಶವ ಸಂಸ್ಕಾರ ಮಾಡಲು ಸ್ಮಶಾನ ಭೂಮಿ ಒದಗಿಸಲು ಹಾಗೂ ಒತ್ತುವರಿಯಾದ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲು ಕೈಗೊಂಡಿರುವ ಕ್ರಮಗಳ ವಿರುದ್ಧ ಅರ್ಜಿದಾರರು ಎತ್ತಿರುವ ಆಕ್ಷೇಪಗಳಿಗೆ ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು ಆಕ್ಷೇಪಿಸಿ ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಹಾಗೂ ನ್ಯಾ. ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಈ ನಿರ್ದೆಶನ ನೀಡಿ ವಿಚಾರಣೆ ಮುಂದೂಡಿದೆ.
ರಾಜ್ಯದಲ್ಲಿ ಜನಸವತಿ ಇರುವ ಎಲ್ಲ ಗ್ರಾಮಗಳಿಗೆ ಶವ ಸಂಸ್ಕಾರಕ್ಕಾಗಿ ಸ್ಮಶಾನ ಜಾಗ ಮಂಜೂರು ಮಾಡಬೇಕು. ಒತ್ತುವರಿಯಾದ ಸರ್ಕಾರದ ಜಮೀನನ್ನು ತೆರವುಗೊಳಿಸಬೇಕು ಎಂದು 2019ರ ಆಗಸ್ಟ್ 20ರಂದು ಹೈಕೋರ್ಟ್ ಆದೇಶ ನೀಡಿತ್ತು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳುತ್ತಾ ಬಂದಿದೆ. ಆದರೆ, ವಾಸ್ತವ ಸಂಗತಿ ಬೇರೆಯೇ ಇದೆ. ಇನ್ನೂ ಅನೇಕ ಗ್ರಾಮಗಳಿಗೆ ಶವ ಸಂಸ್ಕಾರಕ್ಕೆ ಸ್ಮಶಾನ ಜಾಗ ಒದಗಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.