ಮಂಡ್ಯ: ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು – ಮೈಸೂರು ಹೆದ್ದಾರಿ ಬಂದ್ ಮಾಡಿ ಆ.
21ರಂದು ಪ್ರತಿಭಟಿಸಲು ಬಿಜೆಪಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಂಡ್ಯದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಐದು ಜಿಲ್ಲೆಗಳ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಮುಖಂಡರ ಭಾಗಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ ಗೌಡ, ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವಂತೆ ಆದೇಶ ಇಲ್ಲದಿದ್ದರೂ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡುವ ಮೂಲಕ ರೈತರಿಗೆ ದ್ರೋಹ ಮಾಡಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ, ಜಲಾಶಯಗಳಲ್ಲಿ ನೀರು ಸಹ ಕಡಿಮೆ ಇದೆ, ಆದರೂ ಸಹ ಏಕಾಏಕಿ ತೀರ್ಮಾನ ಕೈಗೊಂಡು ನೀರು ಬಿಡುಗಡೆ ಮಾಡಲಾಗಿದೆ.
ತಮಿಳುನಾಡಿನ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದ ನೀರು ಲಭ್ಯವಿದೆ, ಅಷ್ಟೇ ಅಲ್ಲದೆ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ನ ಅಂತಿಮ ತೀರ್ಪಿನಲ್ಲಿ ಕುರುವೈ ಬೆಳೆ ಪ್ರದೇಶ 1.80 ಹೇಕ್ಟರ್ ಮೀರಿರಬಾರದು ಎಂದು ಹೇಳಿದೆ. ಆದರೆ ತಮಿಳುನಾಡಿನಲ್ಲಿ ಮೂರು ಲಕ್ಷ ಹೇಕ್ಟರ್ ಪ್ರದೇಶದಲ್ಲಿ ಕುರುವೈ ಬೆಳೆ ಬೆಳೆಯಲಾಗಿದ್ದು, ಅಲ್ಲಿನ ರೈತರ ಹಿತರಕ್ಷಣೆಗಾಗಿ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡಿದೆ ಎಂದು ದೂರಿದರು.
ಬೆಂಗಳೂರಲ್ಲಿ ನಡೆದ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಸಭೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಭಾಗವಹಿಸಿದ್ದರು. ಅವರ ಓಲೈಕೆಸಲು ಮತ್ತು ಡಿ ಕೆ ಶಿವಕುಮಾರ್ ಹಾಗೂ ಸ್ಟಾಲಿನ್ ನಡುವೆ ಆಗಿರುವ ಒಳ ಒಪ್ಪಂದದಂತೆ ನೀರು ಬಿಡಲಾಗಿದೆ ಎಂದು ಆರೋಪಿಸಿದರು.