ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹಕ್ಕೆ ಇನ್ನೂ ಮುಹೂರ್ತ ಕೂಡಿ ಬಾರದ ಕಾರಣ ಬೇಸತ್ತ 7 ಜೋಡಿಗಳು ಸ್ವಂತ ಹಣದಲ್ಲಿ ವಿವಾಹ ಮಾಡಿಕೊಂಡಿದ್ದಾರೆ.
ಸಾಲೂರು ಮಠದಲ್ಲಿ ಹಸೆಮಣೆ ಏರಿದ ಜೋಡಿಗಳು
ಹೌದು. ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಾಮೂಹಿಕ ವಿವಾಹ ಎರಡು ಬಾರಿ ಮುಂದೂಡಿಕೆಯಾಗಿದೆ. ಹೀಗಾಗಿ ಕ್ಷೇತ್ರದಲ್ಲಿರುವ ಸಾಲೂರು ಮಠದಲ್ಲಿ 7 ಜೋಡಿಗಳು ಹಸೆಮಣೆ ಏರಿ ನೂತನ ಜೀವನಕ್ಕೆ ಕಾಲಿಟ್ಟಿದ್ದಾರೆ. ಆ. 23 ರಂದು ಸಾಮೂಹಿಕ ವಿವಾಹಕ್ಕೆ ದಿನಾಂಕ ನಿಗದಿಯಾಗಿತ್ತು. ಆದರೆ, ಈ ದಿನಾಂಕ ಮುಂದೂಡಿಕೆಯಾಗಿ ಬಳಿಕ ಆ. 28ರಂದು ನಿಗದಿಯಾಗಿತ್ತು. ಆದರೆ ಈಗ ಆ.28ರಂದು ನಿಗದಿಯಾಗಿದ್ದ ಸಾಮೂಹಿಕ ವಿವಾಹ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ. ಇದು ಭಕ್ತರು ಬೇಸರಕ್ಕೆ ಕಾರಣವಾಗಿದೆ.
ಮಲೆಮಾದಪ್ಪನ ಸನ್ನಿಧಿಯಲ್ಲಿ ವಿವಾಹವಾದರೆ ಶುಭ ಎಂಬ ನಂಬಿಕೆಯಿದೆ. ಈ ಹಿನ್ನೆಲೆ ಈಗಾಗಲೇ 67 ಜೋಡಿಗಳ ನೋಂದಣಿ ಮಾಡಿಕೊಂಡಿದ್ದರು. ಆದರೆ, ಈಗ ಎರಡು ಬಾರಿ ವಿವಾಹ ದಿನಾಂಕ ಮುಂದೂಡಿಕೆ ಆಗಿದೆ. ಇದರಿಂದ ಬೇಸರಗೊಂಡು ಸಾಲೂರು ಮಠದಲ್ಲಿ ಸ್ವಂತ ದುಡ್ಡಿನಲ್ಲಿ ಸೋಮವಾರ 7 ಜೋಡಿಗಳು ಸಪ್ತಪದಿ ತುಳಿದಿದ್ದಾರೆ.
ಹಸೆಮಣೆ ಏರಿದ 7 ಜೋಡಿ: ವಿವಾಹ ನಿಶ್ಚಯವಾಗಿದ್ದ ಬಹುತೇಕ ಬಡ ವರ್ಗದ ವಧು-ವರರು ಮಲೆಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಅರ್ಜಿ ಸಲ್ಲಿಸಿದ್ದರು. ಆದರೆ, 2 ಬಾರಿ ವಿವಾಹ ಮುಂದೂಡಿಕೆಯಾಗಿದೆ. ಈ ಹಿನ್ನೆಲೆ ಚಾಮರಾಜನಗರದ ಜಗದೀಶ್-ನಂಜನಗೂಡಿನ ಕಾವ್ಯಶ್ರೀ, ಪಿ.ಜಿ ಪಾಳ್ಯದ ಮಹೇಶ್ಕುಮಾರ್- ಮೈಸೂರಿನ ಹೊರಳವಾಡಿಯ ರಮ್ಯ, ತಾಳವಾಡಿಯ ಉದಯ ಕುಮಾರ್ -ಇದೇ ಗ್ರಾಮದ ಸ್ನೇಹ, ನರಸೀಪುರದ ದಿನೇಶ್ – ಮೈಸೂರಿನ ನಿರ್ಮಲ, ನಂಜನಗೂಡು ಹಳೇಪುರದ ಮಹೇಂದ್ರ – ಚಾಮರಾಜನಗರದ ಅರಳೀಪುರ ಗ್ರಾಮದ ಮಂಗಳಮ್ಮ, ಮೈಸೂರಿನ ಸಂಜಯ್- ಸೌಭಾಗ್ಯ ಹಾಗೂ ಚಾಮರಾಜನಗರದ ರವಿ – ಸೌಮ್ಯ ಜೋಡಿ ಸಾಲೂರು ಬೃಹನ್ಮಠದಲ್ಲಿ ನೂತನ ಜೀವನಕ್ಕೆ ಕಾಲಿಟ್ಟಿದ್ದಾರೆ.
ಪ್ರಾಧಿಕಾರದ ಕಾರ್ಯದರ್ಶಿ ಪ್ರತಿಕ್ರಿಯೆ: ಇನ್ನು ಮುಂದೆ ವಿವಾಹ ದಿನಾಂಕ ಪೋಸ್ಟ್ ಪೋನ್ ಮಾಡಲ್ಲ. ಕೆಲವರ ದಾಖಲಾತಿ ಸರಿಪಡಿಸುವಿಕೆ ಹಾಗೂ ಉಸ್ತುವಾರಿ ಸಚಿವರ ಸಮಯಕ್ಕಾಗಿ ಕಾಯುತ್ತಿದ್ದೇವೆ. ಸೆ. 3 ಅಥವಾ 6ರಂದು ಸಚಿವರು ಬರುವುದಾಗಿ ಹೇಳಿದ್ದಾರೆ. ಈ ಬಾರಿ ಸಾಮೂಹಿಕ ವಿವಾಹ ಖಂಡಿತ ನೆರವೇರುತ್ತದೆ ಎಂದು ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮಾಹಿತಿ ನೀಡಿದ್ದಾರೆ. ಇತ್ತ ಸಚಿವರ ಸಮಯಕ್ಕಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಪ್ರಾಧಿಕಾರ ಮುಂದೂಡಿಕೆ ಮಾಡುತ್ತಿದೆ ಎಂಬ ಆರೋಪವೂ ಕೇಳಿ ಬಂದಿದೆ.