ಸಿನಿಮಾ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಬಹಳಷ್ಟು ಸೇವೆ ಸಲ್ಲಿಸಿದಂತಹ ಹಿರಿಯ ರಂಗಭೂಮಿ ನಟ ಹೆಚ್.ಜಿ. ಸೋಮಶೇಖರ ರಾವ್ (ಸೋಮಣ್ಣ)86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂದು ನಮ್ಮನ್ನು ಅಗಲಿದ್ದಾರೆ.
ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ.
ಖ್ಯಾತ ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಗಂಭೀರ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ರಾಯರು ಅನೇಕ ಚಿತ್ರಗಳಲ್ಲಿ ಭಾವಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದರು.
ರವೀ ನಿರ್ದೇಶನದ ‘ಮಿಥಿಲೆಯ ಸೀತೆಯರು’ಇವರ ಅಭಿನಯ ಸಾಮರ್ಥ್ಯವನ್ನು ಸರಿಯಾಗಿ ಗುರುತಿಸುವಂತೆ ಮಾಡಿತು. ರವೀಯವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾಯರು ನೀಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತು.
ಕೆನರಾ ಬ್ಯಾಂಕ್ನಲ್ಲಿ ಉನ್ನತ ಅಧಿಕಾರಿಯಾಗಿದ್ದು ನಿವೃತ್ತಿ ಹೊಂದಿದ ರಾಯರಿಗೆ ಕನ್ನಡ ರಂಗಭೂಮಿಗೆ ತಮ್ಮ ಸೇವೆಯನ್ನು ಸಲ್ಲಿಸುವುದೇ ನಿಜವಾದ ಕಾಯಕವಾಯಿತು. ಸೋಮಶೇಖರರಾಯರ ಬದುಕಿನ ಅನುಭವ ಕಥನವು ಪ್ರಕಟವಾಗಿದೆ.