Breaking News

ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ ಎಂದು ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ಧರ್ಮಕ್ಕೋಸ್ಕರ ಮನುಷ್ಯ ಅಲ್ಲ.

ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೇ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಇಂದು ಸಂಜೆ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ. ಮನುಷ್ಯ ದ್ವೇಷ- ಅಧರ್ಮದ ವಿರುದ್ಧವೇ ಕೃಷ್ಣ ಕೈಯಲ್ಲಿ ಶಸ್ತ್ರ ಹಿಡಿಯದೇ ಹೋರಾಡಿ ಧರ್ಮ ಸ್ಥಾಪನೆ ಮಾಡಿದ ಎಂದರು.

ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ಕೂಡ ಮನುಷ್ಯ ಪ್ರೀತಿಯ ಸಮಾನತೆಯ ಸಮಾಜ ಸೃಷ್ಟಿ ಆಗಬೇಕು ಎನ್ನುವುದಾಗಿತ್ತು. ಸ್ವತಂತ್ರ ಭಾರತಕ್ಕೆ ಸಂವಿಧಾನ ಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವೂ ಇದೇ ಆಗಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದ ಧರ್ಮವನ್ಮು ಒಪ್ಪಿಕೊಳ್ಳುವ, ಆಚರಿಸುವ ಸ್ವಾತಂತ್ರ್ಯವನ್ನು ನೀಡಿತು. ಜಾತಿ, ಧರ್ಮ ಆಧಾರಿತ ತಾರತಮ್ಯ ಮತ್ತು ಅಸಮಾನತೆ ಸಂವಿಧಾನಬಾಹಿರ ಎಂದು ಅಂಬೇಡ್ಕರ್ ಘೋಷಿಸಿದರು. ಹೀಗಾಗಿ ಸಂವಿಧಾನವನ್ನು ರಕ್ಷಿಸುವವರ ಕೈಯಲ್ಲಿ ಅಧಿಕಾರ ಇರಬೇಕು. ಸಂವಿಧಾನ ವಿರೋಧಿಗಳ ಕೈಗೆ ದೇಶದ ಅಧಿಕಾರವನ್ನು ನೀಡಿ ಪರಿತಪಿಸಬೇಡಿ ಎಂದು ಕಿವಿಮಾತು ಹೇಳಿದರು.

ಯಾದವ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣ ಪಡೆದಾಗ ಮಾತ್ರ ತಾರತಮ್ಯದಿಂದ ಹೊರಗೆ ಬರಬಹುದು. ಶಿಕ್ಷಣದ ಮೂಲಕ ಅಸಮಾನತೆಯನ್ನು ತೊಡೆದು ಹಾಕಬಹುದು. ಯಾದವ ಸಮುದಾಯದ ಯಾರೊಬ್ಬರೂ ಶಾಸಕರಾಗಿ ಗೆಲ್ಲದ ಕಾರಣದಿಂದ ನಾನು ಈ ಸಮುದಾಯಕ್ಕೆ ಸೇರಿದ ನಾಗರಾಜ ಯಾದವರನ್ನು ಕರೆದು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೆ. ಇದೇ ರೀತಿ ಸಮುದಾಯದ ಹಲವು ಮಂದಿಗೆ ನಾನಾ ರೀತಿಯ ರಾಜಕೀಯ ಪ್ರಾತಿನಿಧ್ಯ , ಅವಕಾಶಗಳನ್ನು ನಾನು ಒದಗಿಸಿದ್ದೇನೆ ಎಂದರು.

ಗೊಲ್ಲ, ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸಿ ಎಂದು ಕೇಂದ್ರಕ್ಕೆ ಶಿಫಾರಸು ಮಾಡಿದ್ದೇನೆ. ಕೇಂದ್ರ ಸರ್ಕಾರ ಹಿಡ್ಕೊಂಡು ಕುಳಿತಿದೆ. ರಾಜ್ಯ ಸರ್ಕಾರಕ್ಕೆ ಅಧಿಕಾರ ಇದ್ದಿದ್ದರೆ ಇಷ್ಟೊತ್ತಿಗೆ ನಾನೇ ಮಾಡಿ ಮುಗಿಸುತ್ತಿದ್ದೆ. ಆದರೂ ನಮ್ಮ ಶಿಫಾರಸು ಜಾರಿ ಮಾಡುವಂತೆ ಕೇಂದ್ರಕ್ಕೆ ಒತ್ತಡ ಹಾಕುತ್ತೇವೆ. ಮೀಸಲಾತಿ ಪ್ರಮಾಣವನ್ನು ಶೇ 50 ಕ್ಕಿಂತ ಹೆಚ್ಚಿಸಲು ಕಾನೂನು ತರಲು ಅಗತ್ಯ ಕ್ರಮ ಕೈಮ ಕೈಗೊಂಡು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಯಾದವ ಸಮುದಾಯದ ಒಬ್ಬರನ್ನು ಕೆಪಿಎಸ್​ಸಿ ಸದಸ್ಯರನ್ನಾಗಿ ಮಾಡಿ ಎನ್ನುವ ಬೇಡಿಕೆ ಇದೆ. ಮುಂದೆ ಅವಕಾಶ ಒದಗಿಸುತ್ತೇನೆ. ನಾನು ಸಾಮಾಜಿಕ ನ್ಯಾಯದಿಂದ ವಂಚಿತರಾದ ಎಲ್ಲಾ ಜಾತಿ ಸಮುದಾಯಗಳ ಪರವಾಗಿ ನಾನು ಇರುತ್ತೇನೆ‌. ಸಾಮಾಜಿಕ ನ್ಯಾಯದ ಹಿತಾಸಕ್ತಿ ಕಾಪಾಡುತ್ತೇನೆ ಎಂದರು. ಚಿತ್ರದುರ್ಗ ಜಿಲ್ಲೆ ಶ್ರೀ ಕೃಷ್ಣ ಯಾದವ ಮಹಾಸಂಸ್ಥಾನ ಮಠದ ಯಾದವಾನಂದ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ವಿಧಾನ‌ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ