ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಿಂದಾಗಿ ನಷ್ಟಕ್ಕೊಳಗಾಗಿದ್ದೇವೆ ಎನ್ನುತ್ತಿರುವ ಖಾಸಗಿ ಸಾರಿಗೆ ಚಾಲಕರು ಮತ್ತು ಮಾಲೀಕರು, ನಮಗೆ ಪರಿಹಾರ ಒದಗಿಸಬೇಕು ಮತ್ತು ನಮ್ಮ ಪರ್ಯಾಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನಾಳೆ ನಗರದಲ್ಲಿ ಬಂದ್ಗೆ ಕರೆ ಕೊಟ್ಟಿದ್ದಾರೆ.
ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಟ್ಟು ಹಿಡಿದಿವೆ. ಚಾಲಕರಿಗೆ ಸಹಾಯಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಮಧ್ಯರಾತ್ರಿಯಿಂದಲೇ ಖಾಸಗಿ ವಾಹನಗಳ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಹೀಗಾಗಿ, ದೂರದೂರುಗಳಿಗೆ ಸಂಚರಿಸುವ ಪ್ರಯಾಣಿಕರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ.
ಆಟೋ, ಕಂಪನಿ ಕ್ಯಾಬ್, ಏರ್ಪೋರ್ಟ್ ಕ್ಯಾಬ್, ಸ್ಕೂಲ್ ಬಸ್, ಖಾಸಗಿ ಬಸ್ ಚಾಲಕರ ಮತ್ತು ಮಾಲೀಕರ ಒಕ್ಕೂಟಗಳು ಬಂದ್ಗೆ ಸಂಪೂರ್ಣ ಬೆಂಬಲ ನೀಡಿವೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ನಮ್ಮ ಮೆಟ್ರೋ, ಬೈಕ್, ಟ್ಯಾಕ್ಸಿ ಸೇವೆಗಳು ಎಂದಿನಂತೆ ಇರಲಿದೆ.
ಬಂದ್ಗೆ 30ಕ್ಕೂ ಹೆಚ್ಚು ಸಂಘಟನೆಗಳು ಕೈ ಜೋಡಿಸಿವೆ. ಸುಮಾರು 4 ಲಕ್ಷ ಆಟೋ, 2 ಲಕ್ಷ ಟ್ಯಾಕ್ಸಿ, 30 ಸಾವಿರ ಗೂಡ್ಸ್ ವಾಹನಗಳು, 6 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 90 ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೋರೇಟ್ ಕಂಪನಿ ಬಸ್ಗಳು ಬಂದ್ ಆಗುವುದರಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗಲಿದೆ.
.