ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (SCSP TSP) ಅನುದಾನ ಬಳಕೆ ಮಾಡುತ್ತಿದೆ.
ಸರ್ಕಾರದ ನಡೆಗೆ ಪ್ರತಿಪಕ್ಷ ಬಿಜೆಪಿ ಹಾಗು ದಲಿತ ನಾಯಕರು ಟೀಕಾಸಮರ ನಡೆಸಿದ್ದಾರೆ. ಸರ್ಕಾರ ಈಗಾಗಲೇ ಎಸ್ಸಿಎಸ್ಪಿಟಿಎಸ್ಪಿ ಅನುದಾನದಿಂದ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಬಿಡುಗಡೆ ಮಾಡಿದೆ. ಈವರೆಗೆ ಬಿಡುಗಡೆಯಾದ ಹಣ ಎಷ್ಟು?, ಎಷ್ಟು ಹಣ ಹಂಚಿಕೆಯಾಗಿದೆ? ನೋಡೋಣ.
ಕಾಂಗ್ರೆಸ್ ಸರ್ಕಾರ ತನ್ನ ಶತದಿನಗಳ ಆಡಳಿತದಲ್ಲಿ ಗ್ಯಾರಂಟಿಗಳ ಅನುಷ್ಠಾನಕ್ಕೆ ಬಹುತೇಕ ಆದ್ಯತೆ ನೀಡಿದೆ. ಯುವನಿಧಿ ಹೊರತುಪಡಿಸಿ ಉಳಿದೆಲ್ಲ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. 2023-24ರ ಸಾಲಿನಲ್ಲಿ ಈ ಯೋಜನೆಗಳಿಗೆ 30-35 ಸಾವಿರ ಕೋಟಿ ರೂ. ವೆಚ್ಚವಾಗುವ ಅಂದಾಜು ಮಾಡಲಾಗಿದೆ. ಮುಂದಿನ ವರ್ಷದಿಂದ ಸುಮಾರು 50 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
ಕೆಲ ಇಲಾಖೆಗಳಿಗೆ ಅನುದಾನ ಕಡಿತಗೊಳಿಸಿ, ಇತರ ಮೂಲಗಳಿಂದ ಸದ್ಯ ಅನುದಾನ ಹೊಂದಿಸಲಾಗುತ್ತಿದೆ. ಇದರಲ್ಲಿ ಪ್ರಮುಖವಾಗಿ ದಲಿತ ಸಮುದಾಯಕ್ಕಾಗಿ ಮೀಸಲಿಡುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (SCSP TSP) ಅನುದಾನದಡಿ ದೊಡ್ಡ ಪ್ರಮಾಣದ ಅನುದಾನವನ್ನು ಬಳಕೆ ಮಾಡಲಾಗುತ್ತಿದೆ. ಎಸ್ಸಿಎಸ್ಪಿಟಿಎಸ್ಪಿ ಯೋಜನೆಯ ಅನುದಾನ ಬಳಕೆ ಮಾಡುವುದಕ್ಕೆ ಪ್ರತಿಪಕ್ಷ ಬಿಜೆಪಿ ಹಾಗೂ ದಲಿತ ನಾಯಕರಲ್ಲದೇ ಕಾಂಗ್ರೆಸ್ನ ಕೆಲ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಅನುದಾನ ದುರ್ಬಳಕೆಯಾಗಲಿದೆ ಎಂದು ಆರೋಪಿಸಿದ್ದರು. ಆದರೂ ಸಿದ್ದರಾಮಯ್ಯ ಸರ್ಕಾರ ಎಸ್ಸಿಎಸ್ಪಿಟಿಎಸ್ಪಿಯಡಿ ಸುಮಾರು 11 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಿದೆ.
ಯಾವ ಯೋಜನೆಗೆ ಎಷ್ಟು ಅನುದಾನ ಹಂಚಿಕೆ?: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ನೀಡಿರುವ ಮಾಹಿತಿಯಂತೆ ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಎಸ್ಸಿಎಸ್ಪಿಟಿಎಸ್ಪಿ ಯೋಜನೆಯಿಂದ 2023-24ರಡಿ 11,144 ಕೋಟಿ ರೂ. ಅನುದಾನ ಹಂಚಿಕೆ ಮಾಡಿದೆ. ಈ ಪೈಕಿ ಶಕ್ತಿ ಯೋಜನೆಗಾಗಿ ಪರಿಶಿಷ್ಟ ಜಾತಿ ಉಪಯೋಜನೆ (SCSP)ಯಿಂದ 560 ಕೋಟಿ ರೂ. ಹಂಚಿಕೆ ಮಾಡಿದ್ದರೆ, ಪರಿಶಿಷ್ಟ ಪಂಗಡ ಉಪಯೋಜನೆಯಿಂದ (TSP) 252 ಕೋಟಿ ರೂ. ಹಂಚಿಕೆ ಮಾಡುವ ಮೂಲಕ ಒಟ್ಟು 812 ಕೋಟಿ ರೂ. ಹಂಚಿಕೆ ಮಾಡಿದೆ.